ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ಸಂವಿಧಾನದ 73ನೇ ತಿದ್ದುಪಡಿ ಮೂಲಕ ಆಡಳಿತ ವಿಕೇಂದ್ರೀಕರಣದ ಆಶಯಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಪಂಚಾಯತ್ರಾಜ್ ವ್ಯವಸ್ಥೆಯನ್ನು ಇಡೀ ದೇಶಕ್ಕೆ ಮಾದರಿಯನ್ನಾಗಿ ತೋರಿಸಿಕೊಟ್ಟ ಕೀರ್ತಿ ಕರ್ನಾಟಕ ರಾಜ್ಯಕ್ಕೆ ಸಲ್ಲುತ್ತದೆ. ರಾಜ್ಯದ ಪಂಚಾಯತ್ರಾಜ್ ವ್ಯವಸ್ಥೆಗೆ ತನ್ನದೇ ಆದ ಇತಿಹಾಸವಿದೆ.
ಪ್ರಸ್ತುತ ಗ್ರಾಮ ಪಂಚಾಯಿತಿಗಳ ಐದು ವರ್ಷದ ಅವಧಿ ಮೇ ಅಂತ್ಯಕ್ಕೆ ಕೊನೆಗೊಳ್ಳಲಿದೆ. ಕೆಲವೊಂದು ಪಂಚಾಯಿತಿಗಳ ಅವಧಿ ಜೂನ್ ಮತ್ತು ಜುಲೈನಲ್ಲಿ ಮುಗಿಯಲಿದೆ. ಒಟ್ಟಾರೆ, ಮೇ ಮತ್ತು ಜೂನ್ ತಿಂಗಳಲ್ಲಿ ರಾಜ್ಯದ 6,041 ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆ ನಡೆಯಬೇಕಿದೆ.
ಆದರೆ, ಕೋವಿಡ್-19ನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ನೈಸರ್ಗಿಕ ವಿಕೋಪ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇದನ್ನೇ ನೆಪ ಮಾಡಿಕೊಂಡು ಗ್ರಾಮ ಪಂಚಾಯಿತಿಗಳ ಚುನಾವಣೆ ಮುಂದೂಡಿ ಆಡಳಿತ ಸಮಿತಿ ಅಥವಾ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲು ಮುಂದಾಗಿದ್ದು, ಚುನಾವಣೆಯನ್ನು ಮುಂದೂಡುವ ಪ್ರಸ್ತಾವನೆಯನ್ನು ಘನ ರಾಜ್ಯ ಚುನಾವಣಾ ಅಯೋಗಕ್ಕೆ ಸಲ್ಲಿಸಿದೆ.
ಕೋವಿಡ್-19 ಹಿನ್ನೆಲೆಯಲ್ಲಿ ಕನಿಷ್ಟ ಆರು ತಿಂಗಳು ಗ್ರಾಮ ಪಂಚಾಯಿತಿಗಳ ಚುನಾವಣೆ ಮುಂದೂಡುವುದು ಅನಿವಾರ್ಯವಾಗಿದೆ ಎಂಬುದು ರಾಜ್ಯ ಸರ್ಕಾರದ ವಾದವಾಗಿದೆ. ಆದರೆ, ಇದಕ್ಕೆ ಪರ್ಯಾಯವಾಗಿ ಆಡಳಿತ ಸಮಿತಿ ಅಥವಾ ಆಡಳಿತಾಧಿಕಾರಿ ನೇಮಕ ಮಾಡುವುದು ಸೂಕ್ತವಲ್ಲ. ಅಲ್ಲದೇ ಸರ್ಕಾರದ ಈ ಧೋರಣೆ ಸಂವಿಧಾನ ಮತ್ತು ಪಂಚಾಯತ್ರಾಜ್ ಕಾಯ್ದೆಯ ಆಶಯಗಳಿಗೆ ತದ್ವಿರುದ್ಧವಾಗಿದೆ. ಸರ್ಕಾರದ ಈ ನಡೆಯನ್ನು ವೇಲ್ಫೇರ್ ಪಾರ್ಟಿ ತೀವ್ರವಾಗಿ ಖಂಡಿಸುತ್ತದೆ.
ಆಡಳಿತ ಸಮಿತಿಯ ಸದಸ್ಯರ ನಾಮನಿರ್ದೇಶನದ ವಿಚಾರದಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ರಾಜ್ ಕಾಯ್ದೆ-1993ರ ಕಲಂ 80 ಅನ್ನು ರಾಜ್ಯ ಸರ್ಕಾರ ತನ್ನ ರಾಜಕೀಯ ಅನುಕೂಲಕ್ಕೆ ತಕ್ಕಂತೆ ವಿಶ್ಲೇಷಿಸುತ್ತಿದೆ. ಅಲ್ಲದೇ ಕಲಂ 321ನ್ನು ಸರ್ಕಾರ ಸ್ಪಷ್ಟವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ.
ಈಗಾಗಲೇ ಕೋವಿಡ್-19 ನಿರ್ವಹಣೆ ದೃಷ್ಟಿಯಿಂದ ಗ್ರಾಮ ಪಂಚಾಯಿತಿಗಳಿಗೆ ಸಾಕಷ್ಟು ಹೊಣೆಗಾರಿಕೆ ನೀಡಲಾಗಿದೆ. ಇಂತಹ ಸಂದರ್ಭದಲ್ಲಿ ಚುನಾಯಿತ ಆಡಳಿತ ವ್ಯವಸ್ಥೆಯನ್ನು ದುರ್ಬಲಗೊಳಿಸಿದರೆ ಅಥವಾ ಚುನಾಯಿತ ಆಡಳಿತ ವ್ಯವಸ್ಥೆ ಇಲ್ಲದಂತೆ ಮಾಡಿ ಅದರ ಬದಲಿಗೆ ಆಡಳಿತ ಸಮಿತಿ ಇಲ್ಲವೇ ಆಡಳಿತಾಧಿಕಾರಿಗಳ ವ್ಯವಸ್ಥೆ ಜಾರಿಗೆ ತಂದರೆ ಕೋವಿಡ್-19 ನಿರ್ವಹಣೆಗೆ ಸಮರ್ಪಕ ವ್ಯವಸ್ಥೆ ಇಲ್ಲದೆ ಗ್ರಾಮೀಣ ಪ್ರದೇಶಗಳು ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಇದರಿಂದಾಗುವ ಸಮಸ್ಯೆ, ಅನಾನುಕೂಲತೆಗಳಿಗೆ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ.
ಮೇಲೆ ವಿವರಿಸಿದ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಗಳನ್ನು ಕನಿಷ್ಟ 6 ತಿಂಗಳ ಕಾಲ ಮುಂದೂಡಬೇಕು ಎಂಬ ರಾಜ್ಯ ಸರ್ಕಾರದ ಪ್ರಸ್ತಾವನೆಗೆ ಚುನಾವಣಾ ಆಯೋಗ ಮಾನ್ಯತೆ ಕೊಡಬಾರದು. ಒಂದೊಮ್ಮೆ ಚುನಾವಣೆ ಮುಂದೂಡುವುದು ಅನಿವಾರ್ಯವಾದಲ್ಲಿ ಆಡಳಿತ ಸಮಿತಿ ಸದಸ್ಯರು ಅಥವಾ ಆಡಳಿತಾಧಿಕಾರಿಗಳನ್ನು ನೇಮಕ ಮಾಡುವ ಬದಲು ಈಗಿರುವ ಚುನಾಯಿತ ಸದಸ್ಯರ ಅವಧಿಯನ್ನು 6 ತಿಂಗಳವರೆಗೆ ವಿಸ್ತರಿಸಬೇಕು. ಈ ವಿಚಾರದಲ್ಲಿ ಚುನಾವಣಾ ಆಯೋಗ ತನಗೆ ದತ್ತವಾಗಿರುವ ಸಂವಿಧಾನಬದ್ಧ ಹಾಗೂ ಶಾಸನಬದ್ಧ ಅಧಿಕಾರವನ್ನು ಚಲಾಯಿಸಬೇಕು ಎಂದು ವೇಲ್ಫೇರ್ ಪಾರ್ಟಿ ಈ ಮೂಲಕ ಮನವಿ ಮಾಡಿಕೊಳ್ಳುತ್ತದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.