ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ಕರೋನಾ ಪೀಡಿತ ರೋಗಿಗಳಿಗೆ ಚಿಕಿತ್ಸೆ ನೀಡುವ ನೆಪವೊಡ್ಡಿ ಖಾಸಗಿ ಆಸ್ಪತ್ರೆಗಳ ಮಾಲೀಕರ ಲಾಬಿಗೆ ಮಣಿದು ಚಿಕಿತ್ಸೆ ದರವನ್ನು ಅತಿ ಹೆಚ್ಚು ನಿಗದಿ ಪಡಿಸಿ ಚಿಕಿತ್ಸೆ ಎಂಬ ಹೆಸರಿನಲ್ಲಿ ವ್ಯಾಪಾರ ಮಾಡಲು ಅನುವು ಮಾಡಿ ಕೊಟ್ಟಿರುವ ರಾಜ್ಯ ಸರ್ಕಾರದ ನಿರ್ಧಾರ ಆಘಾತಕಾರಿಯಾಗಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ರಾಜ್ಯಾಧ್ಯಕ್ಷರಾದ ಇಲ್ಯಾಸ್ ಮುಹಮ್ಮದ್ ತುಂಬೆ ಅಭಿಪ್ರಾಯಿಸಿದ್ದಾರೆ.
ಈಗಾಗಲೇ ಲಾಕ್ ಡೌನಿಂದಾಗಿ ಜನಸಾಮಾನ್ಯರ ಜೀವನ ಅಸ್ತವ್ಯಸ್ತವಾಗಿದೆ. ಕೆಲಸವೂ ವ್ಯಾಪಾರವೂ ಇಲ್ಲದೆ ಆರ್ಥಿಕ ಸಂಕಷ್ಟದಿಂದ ಜನರು ತೊಳಲಾಡುತ್ತಿರುವ ಇಂತಹ ಸಂದಿಗ್ಧ ದುಸ್ಥಿತಿಯಲ್ಲಿ ಖಾಸಗಿ ಆಸ್ಪತ್ರೆಗಳ ಮಾಲೀಕರ ಹಿತಾಸಕ್ತಿಗಾಗಿ ಅತ್ಯಂತ ದುಬಾರಿ ಚಿಕಿತ್ಸಾ ದರವನ್ನು ನಿಗದಿಪಡಿಸಿರುವುದು ಸರ್ಕಾರ ಮಾಡಿರುವ ಅಕ್ಷಮ್ಯ ಅಪರಾಧವಾಗಿದೆ.
ಆರ್ಥಿಕ ಸ್ಥಿತಿ ನೆಲಕಚ್ಚಿದ ಈಗಿನ ಸಂದರ್ಭದಲ್ಲಿ ಬಡ ಹಾಗೂ ಕೆಳಮಧ್ಯಮ ವರ್ಗದ ಜನತೆ ಇಷ್ಟೊಂದು ದುಬಾರಿ ಚಿಕಿತ್ಸಾ ದರವನ್ನು ಭರಿಸುವುದು ಹೇಗೆ ಎಂದು ಸರಕಾರ ವಿವರಿಸುವುದಿಲ್ಲ. ಜನಸಾಮಾನ್ಯರ ಕುರಿತು ಕಿಂಚಿತ್ತೂ ಯೋಚಿಸದೆ ಕೇವಲ ವ್ಯಾಪಾರೀ ಮನೋಭಾವನೆಯಿಂದ ಮಾಡಿರುವ ಈ ನಿರ್ಧಾರ ತೀರಾ ತಪ್ಪು ಹೆಜ್ಜೆಯಾಗಿದೆ. ಉತ್ತಮ ವೈದ್ಯಕೀಯ ಚಿಕಿತ್ಸೆಯು ಕೇವಲ ಶ್ರೀಮಂತರಿಗೆ ಮಾತ್ರ ದೊರೆಯಲಿ ಎಂಬುದು ಸರ್ಕಾರದ ನಿಲುವಾಗಿದೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ.
ಈ ಜನ ವಿರೋಧಿ ಆದೇಶವನ್ನು ಸರ್ಕಾರ ಕೂಡಲೇ ಹಿಂಪಡೆಯುವಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಆಗ್ರಹಿಸುತ್ತದೆ ಎಂದು ಇಲ್ಯಾಸ್ ಮುಹಮ್ಮದ್ ತುಂಬೆ ಪ್ರತಿಕ್ರಿಯಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.