ಬೆಂಗಳೂರು(ವಿಶ್ವಕನ್ನಡಿಗ ನ್ಯೂಸ್): ಬಳ್ಳಾರಿಯಲ್ಲಿ ಕೋವಿಡ್ ಬಾಧಿತ ಹಲವು ಮೃತದೇಹಗಳನ್ನು ಒಂದೇ ಗುಂಡಿಯಲ್ಲಿ ಹಾಕಿ ಅಂತ್ಯ ಸಂಸ್ಕಾರ ನಡೆಸಿರುವ ಘಟನೆಗೆ ಸಂಬಂಧಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಸಿರ್ ಪಾಷಾ ಆಘಾತ ವ್ಯಕ್ತಪಡಿಸಿದ್ದಾರೆ.
ಮನುಷ್ಯತ್ವ ಮರೆತ ಸಿಬ್ಬಂದಿ ಯಾವುದೇ ಕರುಣೆ ತೋರದೆ ಮೃತದೇಹಗಳನ್ನು ಒಂದರ ಮೇಲೊಂದರಂತೆ ಎಸೆಯುತ್ತಿರುವ ದೃಶ್ಯ ವಿಡಿಯೋದಲ್ಲಿ ಬಹಳ ಸ್ಪಷ್ಟವಾಗಿ ಕಾಣುತ್ತಿದೆ. ಯಾವುದೇ ಒಂದು ಮೃತದೇಹವು ತನ್ನದೇ ಆದ ಘನತೆಯನ್ನು ಹೊಂದಿರುತ್ತದೆ ಮತ್ತು ಅದನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯವೂ ಅಗಿರುತ್ತದೆ. ಆದರೆ ಬಳ್ಳಾರಿಯಲ್ಲಿ ನಡೆದ ಈ ಘಟನೆಯು ಇಡೀ ನಾಗರಿಕ ಸಮಾಜವನ್ನು ತಲೆತಗ್ಗಿಸುವಂತೆ ಮಾಡಿದೆ.
ಜಿಲ್ಲಾಡಳಿತ, ಆರೋಗ್ಯ ಇಲಾಖೆಯ ನಿರ್ಲಕ್ಷ್ಯವು ಈ ಅಮಾನವೀಯ ಘಟನೆಗೆ ನೇರ ಕಾರಣವಾಗಿದೆ. ಈ ಘಟನೆಗೆ ಕಾರಣರಾದವರ ಮೇಲೆ ಕೂಡಲೇ ಕ್ರಮ ಜರಗಿಸಬೇಕು, ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು ಮತ್ತು ಆಯಾ ಧರ್ಮೀಯರ ವಿಧಿ ವಿಧಾನದಂತೆ ಮೃತದೇಹ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಬೇಕೆಂದು ನಾಸಿರ್ ಪಾಷಾ ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.
ಆರೋಗ್ಯ ಇಲಾಖೆಯಡಿ ತಜ್ಞ ವೈದ್ಯರಿಂದ ತರಬೇತು ಪಡೆದ ಪಾಪ್ಯುಲರ್ ಫ್ರಂಟ್ ಕಾರ್ಯಕರ್ತರು ಈಗಾಗಲೇ ಕರ್ನಾಟಕ ರಾಜ್ಯದ ರಾಮನಗರ, ಬೆಂಗಳೂರು ಮತ್ತು ಮಂಗಳೂರು ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಸುಮಾರು 350ಕ್ಕೂ ಹೆಚ್ಚು ಕೋವಿಡ್ ಬಾಧಿತ ಮೃತದೇಹಗಳನ್ನು ಆಯಾ ಧರ್ಮದವರ ವಿಧಿವಿಧಾನದಂತೆ ಅಂತ್ಯ ಸಂಸ್ಕಾರವನ್ನು ನಡೆಸಿದ್ದಾರೆ. ರಾಜ್ಯದಲ್ಲಿ ಇಂತಹ ಮಾನವೀಯ ಕಾರ್ಯಕ್ಕೆ ಪಾಪ್ಯುಲರ್ ಫ್ರಂಟ್ ನ ಕಾರ್ಯಕರ್ತರು ಸದಾ ಸಿದ್ಧರಿದ್ದಾರೆ ಎಂದು ನಾಸಿರ್ ಪಾಷಾ ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.