ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್): ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಮೂಲಕ ಸರ್ಕಾರದ ನಿರ್ದೇಶನದಂತೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಕ್ರಮ ಕೈಗೊಳ್ಳಬೇಕೆಂದು ಶಾಸಕ ವಿ.ಮುನಿಯಪ್ಪ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ತಾಲೂಕು ಕಚೇರಿಯ ಸಭಾಂಗಣದಲ್ಲಿ ರಾಷ್ಟ್ರೀಯ/ನಾಡ ಹಬ್ಬ ಆಚರಣಾ ಸಮಿತಿಯ ವತಿಯಿಂದ ಡಾ. ಬಾಬು ಜಗಜೀವನ್ ರಾಮ್ ಜಯಂತಿಯನ್ನು ಆಚರಿಸಿ ಡಾ ಬಿಆರ್ ಅಂಬೇಡ್ಕರ್ ಅವರ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಸಮಾಜದಲ್ಲಿ ಸೌಹಾರ್ದತೆ ಮತ್ತು ಸಮಾನತೆಯನ್ನು ಜಾರಿಗೊಳಿಸಲು ಹೋರಾಟ ನಡೆಸಿದ ಡಾ ಬಾಬುಜಗಜೀವನ್ ರಾಮ್ ಹಾಗೂ ಜಗತ್ತಿನಲ್ಲಿ ಶ್ರೇಷ್ಟ ಸಂವಿಧಾನವನ್ನು ರಚಿಸಿದ ಡಾ ಬಿಆರ್ ಅಂಬೇಡ್ಕರ್ ಅವರ ಜೀವನ ಆದರ್ಶಗಳನ್ನು ಮೈಗೂಡಿಸಿಕೊಂಡು ಆದರ್ಶ ಸಮಾಜವನ್ನು ನಿರ್ಮಿಸಬೇಕೆಂದು ಕರೆ ನೀಡಿದರು.
ರಾಜ್ಯದಲ್ಲಿ ದಿನೇದಿನೇ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು ಹೆಚ್ಚು ಜನಸಂದಣಿಯನ್ನು ಸರ್ಕಾರ ನಿರ್ಬಂಧಿಸಿದೆ ಸಭೆ ಸಮಾರಂಭಗಳನ್ನು ನಡೆಸಲು ಮಾರ್ಗಸೂಚಿಗಳನ್ನು ಜಾರಿಗೊಳಿಸಿದ್ದು ಅದರ ಅನ್ವಯ ಜಯಂತಿಗಳನ್ನು ಆಚರಿಸಲು ಕ್ರಮ ಕೈಗೊಳ್ಳಬೇಕೆಂದ ಅವರು ಡಾ ಬಿಆರ್ ಅಂಬೇಡ್ಕರ್ ಅವರ ಜಯಂತಿಯನ್ನು ಸರ್ಕಾರದ ಆದೇಶಗಳನ್ನು ಪಾಲಿಸಿ ಅರ್ಥ ಪೂರ್ಣವಾಗಿ ಮಾಡಬೇಕೆಂದು ಸೂಚಿಸಿದರು.
ನಗರದಲ್ಲಿ ಡಾ ಬಿಆರ್ ಅಂಬೇಡ್ಕರ್ ಭವನ ನಿರ್ಮಿಸುವ ವಿಚಾರದಲ್ಲಿ ಅತಿ ಶೀಘ್ರದಲ್ಲಿ ವಿಶೇಷ ಸಭೆಯನ್ನು ಕರೆದು ಭವನವನ್ನು ನಿರ್ಮಿಸಲು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದ ಶಾಸಕರು ಮುಂದಿನ ದಿನಗಳಲ್ಲಿ ನಡೆಯುವ ಸಭೆಯಲ್ಲಿ ತಾಲೂಕು ಮಟ್ಟ ಅಧಿಕಾರಿಗಳು ಹಾಗೂ ಸಂಘಟನೆಗಳ ಪದಾಧಿಕಾರಿಗಳ ಸಮ್ಮುಖದಲ್ಲಿ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದೆಂದರು.
ಸಭೆಯಲ್ಲಿ ತಹಶೀಲ್ದಾರ್ ಬಿಎಸ್ ರಾಜೀವ್, ಸಮಾಜ ಕಲ್ಯಾಣ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಮುನಿರಾಜು,ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್ಮೂರ್ತಿ, ಮಜಿನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ಬಾರೆಡ್ಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್ ಶ್ರೀನಿವಾಸ್, ತಾಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಡಾ ಎಸ್ವಿ ಮಂಜುನಾಥ್, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್, ಸಿಡಿಪಿಒ ನಾಗವೇಣಿ,ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕ ಪ್ರಶಾಂತ್ ಹಾಗೂ ದಲಿತಪರ ಸಂಘಟನೆಗಳ ಪದಾಧಿಕಾರಿಗಳು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.