ಶ್ರೀನಿವಾಸಪುರ (ವಿಶ್ವಕನ್ನಡಿಗ ನ್ಯೂಸ್): ತಾಲ್ಲೂಕಿನ ಪ್ರಭಾವಿ ರಾಜಕಾರಣಿಗಳ ಕುಮ್ಮಕ್ಕಿನಿಂದಾಗಿ ಮತದಾರರ ಪಟ್ಟಿಯಲ್ಲಿ ನೆರೆಯ ರಾಜ್ಯವಾದ ಆಂಧ್ರದ ವ್ಯಕ್ತಿಗಳನ್ನು ಸೇರಿಸಲಾಗಿದೆ ಎಂದು ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿ ಆಪಾದಿಸಿದರು.
ಪಟ್ಟಣದ ಜೆಡಿಎಸ್ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕ್ಷೇತ್ರದ ಬಹುತೇಕ ಕಡೆಗಳಲ್ಲಿ ಇದೇ ಪರಿಸ್ಥಿತಿ ಇದೆ ಎಂದು ಹೇಳಿದರು. ಪರಿಶೀಲಿಸಲಾದ ಬಹಳಷ್ಟು ಮತದಾರರ ಪಟ್ಟಿಗಳಲ್ಲಿ 50 ರಿಂದ 150 ಹೆಸರುಗಳನ್ನು ಅಕ್ರಮವಾಗಿ ಸೇರಿಸಲಾಗಿದೆ.
ಇದು ನಾಗರಿಕ ಸಮಾಜ ತಲೆ ತಗ್ಗಿಸಬೇಕಾದ ವಿಷಯ ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ. ಪ್ರಭಾವಿ ಮುಖಂಡರ ಒತ್ತಡಕ್ಕೆ ಮಣಿದು ಅಧಿಕಾರಿಗಳು ಅಕ್ರಮ ಎಸಗಿದ್ದಾರೆ . ಈ ಕುರಿತು ರಾಜ್ಯ ಚುನಾವಣಾ ಆಯೋಗ ಹಾಗೂ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗುವುದು. ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗಿರುವ ಅನರ್ಹ ಮತದಾರರನ್ನು ತೆಗೆಯದೆ ಯಾವುದೇ ಚುನಾವಣೆ ನಡೆಸಬಾರದು ಎಂದು ಆಗ್ರಹಿಸಿದರು.
ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಧಿಕಾರದಲ್ಲಿರುವ ಗ್ರಾಮ ಪಂಚಾಯಿತಿಗಳಲ್ಲಿ ಸ್ಥಳೀಯ ವಿರೋಧ ಪಕ್ಷದ ಮುಖಂಡರು ಅಧಿಕಾರಿಗಳ ಮೂಲಕ ಅಭಿವರದ್ಧಿಗೆ ಅಡ್ಡಗಾಲು ಹಾಕುತ್ತಿದ್ದಾರೆ. ಈ ಕುರಿತು ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಸಂಬಂಧಪಟ್ಟ ಇಲಾಖೆ ಆಯುಕ್ತರಿಗೆ ದೂರು ನೀಡಲಾಗುವುದು ಎಂದು ಹೇಳಿದರು.
ತಾಲ್ಲೂಕಿನ ಆಸ್ಪತ್ರೆಗಳಲ್ಲಿ ವೈದ್ಯರಿಲ್ಲ , ಪೊಲೀಸ್ ಠಾಣೆಗಳಲ್ಲಿ ಸಬ್ ಇನ್ಸ್ಪೆಕ್ಟರ್ಗಳಿಲ್ಲ , ಇದರಿಂದ ನಾಗರಿಕರಿಗೆ ತೊಂದರೆಯಾಗಿದೆ . ಆದರೆ ಇಲ್ಲಿನ ಜನಪ್ರತಿನಿಧಿಗಳು ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ . ಇದು ತಾಲ್ಲೂಕಿನ ದುರ್ದೈವ ಎಂದು ಹೇಳಿದರು. ಜಿಲ್ಲೆಯಲ್ಲಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಸದಸ್ಯತ್ವ ನೋಂದಣಿ ಅಭಿಯಾನ ಯಶಸ್ವಿಯಾಗುವಂತೆ ನೋಡಿಕೊಳ್ಳಬೇಕು. ಪಕ್ಷದ ಸಂಘಟನೆಯನ್ನು ಇನ್ನಷ್ಟು ಬಲಪಡಿಸಬೇಕು ಎಂದು ಹೇಳಿದರು.
ಮುಖಂಡರಾದ ತೂಪಲ್ಲಿ ಆರ್. ನಾರಾಯಣಸ್ವಾಮಿ , ಕೆ. ಶಿವಪ್ಪ , ಶಿವಾರೆಡ್ಡಿ , ಮಂಜುನಾಥರೆಡ್ಡಿ , ಪುರಸಭೆ ಅಧ್ಯಕ್ಷ ಎಂ.ಎನ್.ಲಲಿತಾ ಶ್ರೀನಿವಾಸ್ , ಉಪಾಧ್ಯಕ್ಷೆ ಆಯಿಷಾ ನಯಾಜ್ , ಪುರಸಭೆ ಸದಸ್ಯ ಬಿ.ವೆಂಕಟರೆಡ್ಡಿ , ಮುಖಂಡರಾದ ಜಿ.ರಾಜಣ್ಣ , ವೆಂಕಟೇಶ್ , ಜಗದೀಶ್ , ನಾರಾಯಣಸ್ವಾಮಿ , ಆನಂದ್ , ಉಪಸ್ಥಿತರಿದ್ದರು .
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.