ಸಾಮಾಜಿಕ ಸೇವಾ ಕೆಲಸಗಳಲ್ಲಿ ನಿರತವಾಗಿರುವ ಬಿಜೆಪಿ
(ವಿಶ್ವ ಕನ್ನಡಿಗ ನ್ಯೂಸ್) : ಭದ್ರಾವತಿ: ಜನರು ಸಂಕಷ್ಟದಲ್ಲಿರುವ ಎಲ್ಲ ಸಂದರ್ಭಗಳಲ್ಲಿಯೂ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡು ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ರಾಜ್ಯ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್ ಹೇಳಿದರು.
ಭದ್ರಾವತಿಯಲ್ಲಿ ಸೇವಾ ಭಾರತಿ, ಪ್ರೇರಣಾ ಎಜುಕೇಷನಲ್ ಟ್ರಸ್ಟ್ ಹಾಗೂ ಕೋವಿಡ್ ಸುರಕ್ಷಾ ಪಡೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ವೃತ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ಫುಡ್ ಕಿಟ್ ವಿತರಿಸಿ ಮಾತನಾಡಿದರು.
ಭಾರತೀಯ ಜನತಾ ಪಕ್ಷ ಕೇವಲ ಚುನಾವಣೆಗೆ ಮಾತ್ರ ಸೀಮಿತವಾಗದೇ ಯಾವಾಗಲೂ ಜನರ ಹಿತಕ್ಕಾಗಿ ಸಾಮಾಜಿಕ ಕೆಲಸಗಳನ್ನು ಮಾಡಿಕೊಂಡು ಬರುತ್ತಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರು ಹಾಗೂ ಪಕ್ಷದ ಕಾರ್ಯಕರ್ತರ ಸಹಯೋಗದಲ್ಲಿ ಜನರಿಗೋಸ್ಕರ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿ ಯಶಸ್ವಿ ಅನುಷ್ಠಾನ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಕೋವಿಡ್ ಸೋಂಕು ಎಲ್ಲಡೆ ವ್ಯಾಪಿಸುತ್ತಿದ್ದರೂ ಬಿಜೆಪಿ ಕಾರ್ಯಕರ್ತರು ಎಲ್ಲ ರೀತಿಯ ಸೇವಾ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಕೆಲಸ ಮಾಡುತ್ತಿದ್ದಾರೆ. ಜನರ ಮಧ್ಯೆ ಇದ್ದು ಅನೇಕ ರೀತಿಯಲ್ಲಿ ಸಹಕಾರ ನೀಡುತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಟೆಲಿಮೆಡಿಸಿನ್ ಸೇವೆ ನಡೆಸಲಾಯಿತು. ವಾರ್ ರೂಂ ಮುಖಾಂತರ ರಾಜ್ಯದ ಲಕ್ಷಾಂತರ ಜನರಿಗೆ ನೆರವಿನ ಹಸ್ತ ಚಾಚಲಾಯಿತು. ಸಹಾಯವಾಣಿ ಮೂಲಕ ಅಗತ್ಯ ಮಾರ್ಗದರ್ಶನ ಮಾಡುವ ಕೆಲಸ ಮಾಡಲಾಗುತ್ತಿದೆ ಎಂದರು.
ಕರೊನಾ ಸೋಂಕಿನ ಎರಡನೇ ಅಲೆ ವ್ಯಾಪಿಸುತ್ತಿರುವ ಸಂದರ್ಭದಲ್ಲಿಯೂ ಸೇವಾ ಕೇಂದ್ರದ ಮೂಲಕ ಸಹಾಯಹಸ್ತ ಚಾಚುತ್ತಿದೆ. ಸೇವಾ ಭಾರತಿ ಸಹಯೋಗದಲ್ಲಿ ಕೋವಿಡ್ ಕೇರ್ ಸೆಂಟರ್ನಲ್ಲಿ ಸೋಂಕಿತರು ಹಾಗೂ ಸೋಂಕಿನಿಂದ ಗುಣಮುಖರಾಗುತ್ತಿರುವವರಿಗೆ ಅಗತ್ಯ ಸೇವೆ ಮಾಡಲಾಗುತ್ತಿದೆ ಎಂದು ಹೇಳಿದರು.
ಅಂಗನಾಡಿ ಕಾರ್ಯಕರ್ತೆಯರು , ಆಶಾ ಕಾರ್ಯಕರ್ತೆಯರು , ಅಡುಗೆ ಸಹಾಯಕರು, ಪೌರಕಾರ್ಮಿಕರು, ಆಟೋ ಚಾಲಕರು, ಪೊಲೀಸ್ ಸಿಬ್ಬಂದಿ, ಪತ್ರಿಕಾ ವಿತರಕರು, ಅರ್ಚಕರು ಸೇರಿದಂತೆ ಇಪ್ಪತ್ತು ಸಾವಿರಕ್ಕೂ ಅಧಿಕ ಜನರಿಗೆ ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಸಹಕಾರದೊಂದಿಗೆ ಫುಡ್ಕಿಟ್ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಪ್ರಭಾಕರ್, ಶ್ರೀನಾಥ್, ಆರ್ಎಸ್ಎಸ್ ಪ್ರಮುಖರಾದ ಡಾಕ್ಟರ್ ದತ್ತಾತ್ರೇಯ ಹಾಗೂ ಬಿಜೆಪಿಯ ಕಾರ್ಯಕರ್ತರುಗಳು ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.