ಕೋಲಾರ (ವಿಶ್ವ ಕನ್ನಡಿಗ ನ್ಯೂಸ್ ) : ಜಿಲ್ಲೆಯ ಎಲ್ಲಾ ತಾಲ್ಲೂಕು ಆಸ್ಪತ್ರೆಗಳಿಗೆ ಕೋವಿಡ್ ರೋಗಿಗಳು ಚಿಕಿತ್ಸೆಗೆ ಬಂದಾಗ ಎಲ್ಲಾ ರೀತಿಯ ಚಿಕಿತ್ಸೆ ದೊರೆತು ಗುಣಮುಖರಾಗಬೇಕು. ಚಿಕಿತ್ಸೆ ನೀಡಲು ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ತೋಟಗಾರಿಕೆ , ಯೋಜನೆ ಮತ್ತು ಸ್ಯಾಂಖಿಕ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಮುನಿರತ್ನ ಅವರು ತಿಳಿಸಿದರು.
ಇಂದು ಕೋಲಾರ ಜಿಲ್ಲೆಯ ಎಸ್.ಎನ್.ಆರ್ ಜಿಲ್ಲಾಸ್ಪತ್ರೆ ಹಾಗೂ ತಾಲ್ಲೂಕು ಆಸ್ಪತ್ರೆಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಿ ಮಾತನಾಡಿದರು . 3 ನೇ ಅಲೆ ಬರುವ ಬೀತಿಯಿದ್ದು , 3 ನೇ ಅಲೆಯನ್ನು ತಡೆಯಲು ಎಲ್ಲರೂ ಸಜ್ಜಾಗಬೇಕು. 3 ನೇ ಅಲೆಯಲ್ಲಿ ವಿಶೇಷವಾಗಿ ಮಕ್ಕಳಿಗೆ ಕೋವಿಡ್ ಕಂಡುಬರುವುದಾಗಿ ತಜ್ಞರು ತಿಳಿಸಿದ್ದು , ಮಕ್ಕಳ ಚಿಕಿತ್ಸೆಗೆ ಅಗತ್ಯವಾದ ವೆಂಟಿಲೇಟರ್ ಹಾಗೂ ಚಿಕಿತ್ಸಕ ಪರಿಕರಗಳನ್ನು ವ್ಯವಸ್ಥೆ ಮಾಡಿಕೊಳ್ಳಿ ಎಂದು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು. ಅಂಬುಲೆನ್ಸ್ ವ್ಯವಸ್ಥೆ ಸುಸ್ಥಿಯಲ್ಲಿರಬೇಕು.
ಶ್ರೀನಿವಾಸಪುರ ತಾಲ್ಲೂಕು ಆಸ್ಪತ್ರೆಗೆ 5 ಮಕ್ಕಳ ವೆಂಟಿಲೇಟರ್ ಹಾಗೂ 5 ವಯಸ್ಕರ ವೆಂಟಿಲೇಟರ್ಗಳನ್ನು ನೀಡಲಾಗುವುದು . ಶ್ರೀನಿವಾಸಪುರ ತಾಲ್ಲೂಕು ಆಸ್ಪತ್ರೆಯಲ್ಲಿ 10 ಬೆಡ್ಗಳ ವಿಶೇಷ ಕೊವಿಡ್ ವಾರ್ಡ್ನ್ನು ನಿರ್ಮಿಸುತ್ತಿದ್ದು , 10 ದಿನಗಳಲ್ಲಿ ಬಳಕೆಗೆ ನೀಡಬೇಕು ಎಂದು ಸೂಚಿಸಿದರು.
ಮುಳಬಾಗಿಲು ತಾಲ್ಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನೆ ಕಡಿಮೆಯಿದ್ದು , ಇನ್ನೊಂದು ಆಕ್ಸಿಜನ್ ಪ್ಲಾಂಟ್ನ್ನು ಇನ್ಸ್ಟಾಲ್ ಮಾಡಿ , ಕೆಲವು ಸ್ಟಾಫ್ ನರ್ಸ್ಗಳನ್ನು ಜಿಲ್ಲಾ ಎಸ್.ಎನ್.ಆರ್ ಆಸ್ಪತ್ರೆಗೆ ಕಳುಹಿಸಿ ತರಬೇತಿ ನೀಡಿ ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ರಮೇಶ್ ಕುಮಾರ್ , ಡಾ || ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ನಾಗೇಶ್ , ಜಿಲ್ಲಾಧಿಕಾರಿಗಳಾದ ಡಾ || ಆರ್.ಸೆಲ್ವಮಣಿ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎನ್.ಎಂ.ನಾಗರಾಜ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡೆಕ್ಕಾ ಕಿಶೋರ್ ಬಾಬು , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಜಗದೀಶ್ , ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳು ಡಾ.ಚಂದನ್ , ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ರವಿಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.