ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್): ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿರುವ ಅನೇಕ ವಿದ್ಯಾರ್ಥಿಗಳು ಐಎಎಸ್,ಐಪಿಎಸ್ ಸಹಿತ ಅನೇಕ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ ಜೊತೆಗೆ ಸರ್ಕಾರಗಳು ಸಹ ಸರ್ಕಾರಿ ಶಾಲೆಗಳ ಅಭಿವೃಧ್ಧಿಗೆ ಆದ್ಯತೆ ನೀಡುತ್ತಿದ್ದು ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಿ ಅವರ ಭವಿಷ್ಯವನ್ನು ಉಜ್ವಲಗೊಳಿಸಬೇಕೆಂದು ಗ್ರಾಮ ಪಂಚಾಯಿತಿಯ ಸದಸ್ಯ ಸಂತೋಷ ಬೆಳ್ಳೂಟಿ ಹೇಳಿದರು.
ತಾಲ್ಲೂಕಿನ ಬೆಳ್ಳೂಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಎಸ್.ಡಿ.ಎಂ.ಸಿ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣಕ್ಕೆ ವಿಶೇಷ ಆದ್ಯತೆ ನೀಡಬೇಕು ಸಮಾಜದಲ್ಲಿರುವ ಪ್ರತಿಯೊಬ್ಬರು ತಮ್ಮ ತಮ್ಮ ಮಕ್ಕಳಿಗೆ ಶಿಕ್ಷಣ ನೀಡಿ ಅವರ ಭವಿಷ್ಯವನ್ನು ಉಜ್ವಲಗೊಳಿಸುವ ಜೊತೆಗೆ ಅವರಲ್ಲಿ ಉತ್ತಮ ಸಂಸ್ಕಾರ,ಶಿಸ್ತು ಬೆಳೆಸಬೇಕು ಆಗ ಮಾತ್ರ ಸಮಾಜದಲ್ಲಿ ಮಹತ್ತರ ಬದಲಾವಣೆ ತರಲು ಸಾಧ್ಯವೆಂದರು.
ತಂದೆ-ತಾಯಿಯ ನಂತರ ಶ್ರೇಷ್ಠ ಸ್ಥಾನವನ್ನು ಹೊಂದಿರುವ ಗುರುಗಳು ತಮ್ಮ ಜವಾಬ್ದಾರಿಯನ್ನು ಅರಿತು ಪ್ರತಿಯೊಬ್ಬ ವಿದ್ಯಾರ್ಥಿಗೆ ಉತ್ತಮ ಶಿಕ್ಷಣ ನೀಡಿ ಅವರು ಗ್ರಾಮ,ತಾಲೂಕು ಮತ್ತು ದೇಶಕ್ಕೆ ಕೀರ್ತಿ ತರುವಂತಹ ಕೆಲಸವನ್ನು ಮಾಡಬೇಕು ಶಾಲಾಭಿವೃಧ್ಧಿ ಸಮಿತಿಯ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಶಾಲೆಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಪರಸ್ಪರ ಕೈಜೋಡಿಸಬೇಕು ಇದರಿಂದ ಶಾಲೆಯೂ ಅಭಿವೃಧ್ಧಿಗೊಳ್ಳುವ ಜೊತೆಗೆ ಶೈಕ್ಷಣಿಕ ವ್ಯವಸ್ಥೆಯಲ್ಲಿ ಮತ್ತಷ್ಟು ಸುಧಾರಣೆ ಆಗುತ್ತದೆ ಎಂದರು.
ವಿವಿಧ ಸ್ಪರ್ಧೆಯಲ್ಲಿ ವಿಜೇತ ಭಾಗವಹಿಸಿದ ಶಾಲಾ ಶಿಕ್ಷಕರು ಮತ್ತು ಎಸ್.ಡಿ.ಎಂ.ಸಿ ಸದಸ್ಯರಿಗೆ ಗ್ರಾಪಂ ಸದಸ್ಯ ಸಂತೋಷ ಬೆಳ್ಳೂಟಿ ಬಹುಮಾನ ವಿತರಿಸಿದರು, ಕಾರ್ಯಕ್ರಮದಲ್ಲಿ ಶಾಲಾಭಿವೃಧ್ಧಿ ಸಮಿತಿಯ ಅಧ್ಯಕ್ಷ ರಮೇಶ್, ಭಕ್ತರಹಳ್ಳಿ ಕ್ಲಸ್ಟರ್ ಸಿ.ಆರ್.ಪಿ ನರಸಿಂಹರಾಜು, ಆನೂರು ಗ್ರಾಮ ಪಂಚಾಯತಿ ಪಿಡಿಓ ಕಾತ್ಯಾಯಿನಿ, ಶಾಲೆಯ ಮುಖ್ಯೋಪಾಧ್ಯಾಯಿನಿ ಪದ್ಮ, ಮಂಗಳ, ಸರಳಕುಮಾರಿ, ಕಾಕಚೊಕ್ಕನಹಳ್ಳಿ ಮುಖ್ಯ ಶಿಕ್ಷಕಿ ಸುಮಾ ಹಾಗೂ 11 ಶಾಲೆಗಳ ಎಸ್.ಡಿ.ಎಂ.ಸಿ ಅಧ್ಯಕ್ಷರು,ಉಪಾಧ್ಯಕ್ಷರು,ಸದಸ್ಯರು ಹಾಗೂ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತಿತರರು ಉಪಸ್ಥಿತರಿದ್ದರು.
ವರದಿ: ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.