ಕೋಲಾರ ( ವಿಶ್ವಕನ್ನಡಿಗ ನ್ಯೂಸ್ ) : ಪ್ರಸ್ತುತ ಸಾಲಿನಲ್ಲಿ ಕಳೆದ ಸಾಲಿಗಿಂತ ಹೆಚ್ಚಿನ ಅಭಿವೃದ್ಧಿಯ ಗುರಿಯನ್ನು ಸಾಧಿಸಿ , ಅಧಿಕಾರಿಗಳು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ತೋಟಗಾರಿಕೆ ಮತ್ತು ಯೋಜನೆ , ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಮುನಿರತ್ನ ರವರು ತಿಳಿಸಿದರು.
ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲೆಯ ವಿವಿಧ ಇಲಾಖೆಗಳ ಮಾರ್ಚ್ -2022 ರ ಅಂತ್ಯದವರೆಗೆ ಸಾಧಿಸಿರುವ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ಕೋಲಾರ ಜಿಲ್ಲೆಯಲ್ಲಿ ಕಳೆದ ರಾತ್ರಿ ಸುರಿದ ಮಳೆ ಪರಿಣಾಮದಿಂದ ಶೇ . 80 ರಷ್ಟು ಮಾವು ಬೆಳೆ ನಾಶವಾಗಿದ್ದು , ಈ ಬಗ್ಗೆ ಸರ್ಕಾರದ ಗಮನ ಸೆಳೆಯುವುದಾಗಿ ಸಚಿವರು ತಿಳಿಸಿದರು. ವಿಳಂಬ ಮಾಡದೆ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಅದನ್ನು ಶೀಘ್ರದಲ್ಲಿ ಅಧಿಕಾರಿಗಳು ಬಗೆಹರಿಸಬೇಕು.
ರೈತರ ಜೀವನಕ್ಕೆ ತೊಂದರೆಯಾಗದಂತೆ ಅವರಿಗೆ ಸರಿಯಾದ ರೀತಿಯ ಅಗತ್ಯ ಸೌಲಭ್ಯಗಳನ್ನು ಒದಗಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಪರವಾನಗಿ ಇಲ್ಲದೆ ರಸಗೊಬ್ಬರವನ್ನು ಮಾರುತ್ತಿರುವಂತಹ ಅಂಗಡಿಗಳನ್ನು ಪರಿಶೀಲನೆ ಮಾಡಬೇಕು ಎಂದು ಕೃಷಿ ಅಧಿಕಾರಿಗಳಿಗೆ ಸೂಚಿಸಿದರು. ರಾಗಿ ಖರೀದಿ ಮಾಡುವಾಗ ಪ್ರತಿ ದಿನ ಎಷ್ಟು ಜನ ರೈತರು ನೊಂದಾಯಿಸಿದ್ದಾರೆ ಅದರ ಸಂಪೂರ್ಣ ಮಾಹಿತಿಯನ್ನು ಸರ್ಕಾರಕ್ಕೆ ತಿಳಿಸಬೇಕು ಎಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದರು .
ಜಿಲ್ಲೆಯ ಪ್ರತಿಯೊಬ್ಬ ರೈತನ ಸಂಪೂರ್ಣ ಮಾಹಿತಿಯನ್ನು ಮುಂದಿನ ಸಭೆಯಲ್ಲಿ ಒದಗಿಸಬೇಕು . ನಷ್ಟವಾಗಿರುವ ಬೆಳೆಗಳ ಅಂದಾಜು ಮಾಡಿ ಆ ಬೆಳೆಗಳಿಗೆ ವಿಮೆ ಮಾಡಿಸಿದಲ್ಲಿ ವಿಮಾ ಕಂಪನಿಯ ಪ್ರತಿನಿಧಿಯನ್ನು ಕೂಡಲೇ ಭೇಟಿ ಮಾಡಿ ಬೆಳೆ ವಿಮೆಯನ್ನು ರೈತರಿಗೆ ಶೀಘ್ರದಲ್ಲಿ ಒದಗಿಸುವ ವ್ಯವಸ್ಥೆಯನ್ನು ಮಾಡಬೇಕು ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಿಗೆ ತಿಳಿಸಿದರು.
ಜಿಲ್ಲೆಯ ಪ್ರತಿಯೊಂದು ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಕೊರತೆ ಹಾಗೂ ಇತರೆ ಸಮಸ್ಯೆಗಳ ಸಂಪೂರ್ಣ ಮಾಹಿತಿಯನ್ನು ನೀಡಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದರು. ಜಿಲ್ಲೆಯಲ್ಲಿ 32 ಡಯಾಲಿಸಿಸ್ ಯಂತ್ರಗಳಿವೆ . ಡಯಾಲಿಸಿಸ್ ಕಡೆ ಆರೋಗ್ಯ ಅಧಿಕಾರಿಗಳು ಹೆಚ್ಚಾಗಿ ಗಮನಹರಿಸಬೇಕು, ಜಿಲ್ಲೆಯಲ್ಲಿ 411 ಅಂಗನವಾಡಿ ಕೇಂದ್ರಗಳು ಖಾಸಗಿ ಕಟ್ಟಡಗಳಲ್ಲಿ ನಡೆಯುತ್ತಿವೆ . ಮುಂದಿನ ದಿನಗಳಲ್ಲಿ ಇವುಗಳಿಗೆ ಸರ್ಕಾರಿ ಕಟ್ಟಡಗಳನ್ನು ಒದಗಿಸುವ ಬಗ್ಗೆ ಒತ್ತು ನೀಡಲಾಗುವುದು . ಸ್ಮಶಾನಕ್ಕೆ ಒದಗಿಸಲಾಗಿರುವ ಅನುದಾನವನ್ನು ಬೇರೆ ಯಾವುದೇ ಯೋಜನೆಗಳಿಗೆ ಉಪಯೋಗಸಬಾರದು ಎಂದು ತಿಳಿಸಿದರು .
ಸರ್ಕಾರದ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ ಅವರು ಶಾಲೆಗಳಲ್ಲಿ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಶೌಚಾಲಯ , ಕುಡಿಯುವ ನೀರು , ಆಟದ ಮೈದಾನ ಹಾಗೂ ಸುಸಜ್ಜಿತ ಅಡುಗೆ ಕೋಣೆಗಳನ್ನು ನರೇಗಾ ಯೋಜನೆಯಡಿ ನಿರ್ಮಿಸಲು ಸರ್ಕಾರಕ್ಕೆ ಒತ್ತಾಯಿಸಲಾಗುವುದು .
ಕೋಲಾರ ಜಿಲ್ಲೆಗೆ ಬಿಡುಗಡೆಯಾಗುವ ಸಿ.ಎಸ್.ಆರ್ ಅನುದಾನವನ್ನು ಸಮರ್ಪಕವಾಗಿ ವಿನಿಯೋಗಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು . ಸಂಬಂಧಿತ ಅಧಿಕಾರಿಗಳು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಆಗುವ ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರಿಶೀಲಿಸಬೇಕು ಹಾಗೂ ಆಗಾಗ್ಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಕೂಲಂಕುಶವಾಗಿ ಪರಿಶೀಲಿಸಬೇಕು .
ಗಂಗಾ ಕಲ್ಯಾಣ ಯೋಜನೆಯಡಿ ಜಿಲ್ಲೆಯಲ್ಲಿ ಕೊಳವೆ ಬಾವಿಗಳನ್ನು ಕೊರೆಸಲಾಗುತ್ತಿದ್ದು , ಈ ಯೋಜನೆಯಡಿ ಅಕ್ರಮಗಳಾಗುತ್ತಿವೆ . ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮಕೈಗೊಳ್ಳಬೇಕು , ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಉಂಟಾಗುತ್ತದೆ , ಅದಕ್ಕಾಗಿ ಸಾಕಷ್ಟು ಟ್ರಾನ್ಸ್ಫಾರರ್ಗಳನ್ನು ಸಜ್ಜಾಗಿರಿಸಿಕೊಂಡಿರುವಂತೆ ಬೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು . ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರ ಶಾಸಕರಾದ ಕೆ.ಆರ್.ರಮೇಶ್ ಕುಮಾರ್ ಅವರು ರೈತರಿಗೆ ನೈಸರ್ಗಿಕ ವಿಕೋಪದಿಂದ ಉಂಟಾಗುವಂತಹ ಸಮಸ್ಯೆಗಳನ್ನು ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕು. ಬಹುತೇಕ ಜಿಲ್ಲೆಯಲ್ಲಿ ಎಲ್ಲಾ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ನೀಡಬೇಕು. ಬಡವರಿಗೆ ಇರುವುದು ಒಂದೇ ಶಾಲೆ ಅದು ಸರ್ಕಾರಿ ಶಾಲೆ ಆದರಿಂದ ಅವರಿಗೆ ಬೇಕಾದ ಉತ್ತಮ ಗುಣಮಟ್ಟದ ಶಿಕ್ಷಣ ಸೌಲಭ್ಯಗಳನ್ನು ಅಧಿಕಾರಿಗಳು ಒದಗಿಸಬೇಕು ಎಂದು ತಿಳಿಸಿದರು .
ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎನ್.ನಾರಾಯಣಸ್ವಾಮಿ ಅವರು ಜಿಲ್ಲೆಯಲ್ಲಿ ರೈತರಿಗೆ ಮುಂಗಾರು ಮಳೆಗೆ ಮುಂಚೆ ಬಿತ್ತನೆ ಬೀಜ ದೊರೆಯುವಂತೆ ಮಾಡಬೇಕು . ಕಾಲ ಕಾಲಕ್ಕೆ ಅಭಿವೃದ್ಧಿ ಸಭೆಗಳನ್ನು ನಡೆಸಿ ಜಿಲ್ಲೆಯಲ್ಲಿನ ಕುಂದುಕೊರತೆಗಳನ್ನು ಪರಿಹರಿಸುವ ಬಗ್ಗೆ ಸಚಿವರು , ಶಾಸಕರು ಹಾಗೂ ಅಧಿಕಾರಿಗಳು ಗಮನಹರಿಸಬೇಕು ಎಂದು ತಿಳಿಸಿದರು .
ವಿಧಾನ ಪರಿಷತ್ ಸದಸ್ಯರಾದ ಎಂ.ಎಲ್.ಅನಿಲ್ ಕುಮಾರ್ ರವರು ನಿನ್ನೆ ಸುರಿದ ಅನಿರೀಕ್ಷಿತ ಮಳೆಗೆ ಕೇವಲ ಮಾವು ಮಾತ್ರವಲ್ಲದೇ ಇತರೆ ಬೆಳೆಗಳು ಸಹ ನಾಶವಾಗಿದೆ . ಅವುಗಳಿಗೂ ಸಹ ಬೆಳೆ ಪರಿಹಾರ ನೀಡುವಂತೆ ಸಚಿವರ ಗಮನಕ್ಕೆ ತಂದರು . ಅದಕ್ಕೆ ಸಚಿವರು ಶೀಘ್ರದಲ್ಲೇ ಪರಿಹಾರ ಒದಗಿಸಲಾಗುವುದು ಎಂದು ತಿಳಿಸಿದರು. ಸಭೆಯಲ್ಲಿ ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್.ಮುನಿಸ್ವಾಮಿ , ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಡಾ || ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಮಗದ ಅಧ್ಯಕ್ಷರಾದ ಹೆಚ್.ನಾಗೇಶ್ , ಕೋಲಾರ ವಿಧಾನ ಸಭಾ ಕ್ಷೇತ್ರ ಶಾಸಕರಾದ ಕೆ.ಶ್ರೀನಿವಾಸಗೌಡ , ಕೆ.ಜಿ.ಎಫ್ ವಿಧಾನ ಸಭಾ ಕ್ಷೇತ್ರದ ಶಾಸಕರಾದ ರೂಪಕಲಾ ಶಶಿಧರ್ , ಮಾಲೂರು ವಿಧಾನಸಭಾ ಕ್ಷೇತ್ರ ಶಾಸಕರಾದ ಕೆ.ವೈ.ನಂಜೇಗೌಡ , ಕೆ.ಡಿ.ಪಿ ನಾಮನಿರ್ದೇಶಿತ ಸದಸ್ಯರಾದ ಶ್ರೀನಿವಾಸಮೂರ್ತಿ , ಶಿವಶಂಕರ್ , ಮಂಜುಳಾ , ಜಯಂತಿರಾಜ್ , ಮಂಜುನಾಥ್ , ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಯುಕೇಶ್ ಕುಮಾರ್ , ಉಪ ಕಾರ್ಯದರ್ಶಿ ಸಂಜೀವಪ್ಪ , ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು .
ವರದಿ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.