ಕೋಲಾರ(ವಿಶ್ವಕನ್ನಡಿಗ ನ್ಯೂಸ್) : ಕೋಲಾರ ಜಿಲ್ಲೆಯ ವ್ಯಾಪ್ತಿಗೆ ಬರುವ ನಗರಸಭೆ , ಪುರಸಭೆ ಪಟ್ಟಣ ಪಂಚಾಯಿತಿ ಮತ್ತು ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುವ ಪೌರಕಾರ್ಮಿಕರ ಪ್ರತಿಯೊಂದು ಸಮಸ್ಯೆಗಳಿಗೂ ಅಧಿಕಾರಿಗಳು ಸ್ಪಂದಿಸಬೇಕು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರಾದ ಎಂ .ಶಿವಣ್ಣ ( ಕೋಟೆ ) ಅವರು ತಿಳಿಸಿದರು.
ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್ , ಜಿಲ್ಲಾ ನಗರಾಭಿವೃದ್ಧಿ ಕೋಶ ಹಾಗೂ ಸಮಾಜ ಕಲ್ಯಾಣ ಇಲಾಖೆ , ಕೋಲಾರ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಕೋಲಾರ ಜಿಲ್ಲಾ ವ್ಯಾಪ್ತಿಯಲ್ಲಿರುವ ಎಲ್ಲಾ ಅಧಿಕಾರಿಗಳಿಗೆ ಎಂ.ಎಸ್ ಕಾಯ್ದೆ -2013 ರ ತರಬೇತಿ ಹಾಗೂ ಸ್ವಚ್ಛತಾ ಕಾರ್ಮಿಕರ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಸಭೆಯ ಅಧ್ಯಕ್ಷತೆ ವಹಿಸಿ ಹಾಗೂ ನಂತರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಮ್ಯಾನುಯಲ್ ಸ್ಕ್ಯಾವೆಂಜರ್ಗಳ ನೇಮಕಾತಿಯನ್ನು 2013 ರಲ್ಲಿ ನಿಷೇಧ ಮಾಡಲಾಗಿದೆ. ಮ್ಯಾನುಯಲ್ ಸ್ಕ್ಯಾವೆಂಜರ್ ಕಾರ್ಯನಿರ್ವಹಿಸಿ ಮರಣ ಹೊಂದಿದ್ದ ಪೌರಕಾರ್ಮಿಕರ ಕುಟುಂಬಗಳಿಗೆ ಸರ್ಕಾರದಿಂದ ಸಹಾಯಧನ ನೀಡಲಾಗಿದೆ ಎಲ್ಲಾ ಪಿ.ಡಿ.ಓಗಳು ಪೌರಕಾರ್ಮಿಕರ ಅಭಿವೃದ್ಧಿಗೆ ಕಾರ್ಯನಿರ್ವಹಿಸಬೇಕು. ಪೌರಕಾರ್ಮಿಕರು ಕಾರ್ಯನಿರ್ವಹಿಸಲು ರಕ್ಷಣಾ ಪರಿಕರಗಳನ್ನು ನೀಡಬೇಕು. ಅಧಿಕಾರಿಗಳು ಜಿಲ್ಲೆಯ ಎಲ್ಲಾ ಪೌರಕಾರ್ಮಿಕರಿಗೆ ವಿಮೆಗಳನ್ನು ಮಾಡಿಸಬೇಕು. ವಿಮೆ ಮಾಡಿಸದಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ನೇರ ಹೊಣೆಯಾಗುತ್ತಾರೆ ಎಂದು ತಿಳಿಸಿದರು.
ಕೋಲಾರ ಜಿಲ್ಲೆಯಲ್ಲಿರುವ ನರಸಾಪುರ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಪೌರಕಾರ್ಮಿಕರಿಗೆ ಕನಿಷ್ಠ ವೇತನ ನೀಡುತ್ತಿಲ್ಲದಿರುವ ಬಗ್ಗೆ ಗಮನಕ್ಕೆ ಬಂದಿದ್ದು , ಕಾರ್ಮಿಕ ಕಾಯ್ದೆ ಪ್ರಕಾರ ಕಾರ್ಖಾನೆಗಳಲ್ಲಿ ಕೆಲಸ ಮಾಡುವವರಿಗೆ ಕನಿಷ್ಠ ವೇತನ ನೀಡಬೇಕು. ಯಾವ ಕಾರ್ಖಾನೆಗಳಲ್ಲಿ ಕನಿಷ್ಠ ವೇತನ ನೀಡುತ್ತಿಲ್ಲವೋ ಅಂತಹ ಕಂಪನಿಯವರಿಗೆ ನಿರ್ದೇಶನ ನೀಡಲಾಯಿತು. ಪೌರಕಾರ್ಮಿಕರಿಗೆ ಸರಿಯಾದ ವೇತನ ನೀಡುತ್ತಿಲ್ಲ ಎಂಬುದರ ಬಗ್ಗೆ ಗುತ್ತಿಗೆದಾರರು ಮಾಡುವ ಮೋಸದ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಯಸುವುದು ಒಂದೇ , ಪೌರಕಾರ್ಮಿಕರನ್ನು ಸಮಾಜದ ಮುಂಚೂಣಿಗೆ ತರವುದು ಈ ಆಯೋಗದ ಉದ್ದೇಶವಾಗಿದೆ. ಪೌರಕಾರ್ಮಿಕರು ಮೃತಪಟ್ಟಲ್ಲಿ ಅವರ ಕುಟುಂಬಸ್ಥರಿಗೆ ವಿಮೆ ಮಾಡಿಸಿದ್ದಲ್ಲಿ ರೂ 4 ಲಕ್ಷಗಳ ಪರಿಹಾರವನ್ನು ಆಯೋಗದಿಂದ ನೀಡಲಾಗುವುದು ಎಂದು ತಿಳಿಸಿದರು.
ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರು ಮಾತನಾಡಿ ಬಾಕಿ ಇರುವ ವೇತನವನ್ನು ಪೌರಕಾರ್ಮಿಕರಿಗೆ ಶೀಘ್ರವಾಗಿ ಪಾವತಿಸಬೇಕು. ವೇತನ ಪಾವತಿಯ ಪೂರ್ಣ ಮಾಹಿತಿಯನ್ನು ಒದಗಿಸಬೇಕು. ನಿಗಧಿತ ಪ್ರದೇಶಗಳಲ್ಲಿ ಪೌರಕಾರ್ಮಿಕರು ಕಾರ್ಯನಿರ್ವಹಿಸಬೇಕು. ಪೌರಕಾರ್ಮಿಕರಿಗೆ ಕಡ್ಡಾಯವಾಗಿ ವಸತಿ ಸೌಲಭ್ಯವನ್ನು ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ || ಜಗದೀಶ್ ಅವರು ಮಾತನಾಡಿ ಪೌರಕಾರ್ಮಿಕರು ತಪ್ಪದೇ ಆಯಾ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಆರೋಗ್ಯ ತಪಾಸಣೆಯ ಪೂರ್ಣ ಮಾಹಿತಿಯನ್ನು ಆಸ್ಪತ್ರೆ ಅಧಿಕಾರಿಗಳು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ನೀಡಬೇಕು. ಎಲ್ಲಾ ರೀತಿಯ ಆರೋಗ್ಯ ಸೌಲಭ್ಯಗಳು ಹಾಗೂ ಶಸ್ತ್ರಚಿಕಿತ್ಸಕರು ನಮ್ಮಲ್ಲಿ ಲಭ್ಯವಿದ್ದಾರೆ.
ಸರ್ಕಾರದ ಮಾರ್ಗಸೂಚಿಯಂತೆ ನೇಮಕಾತಿ ಮತ್ತು ವೇತನವನ್ನು ಸಿಬ್ಬಂದಿಗಳಿಗೆ ಪಾವತಿ ಮಾಡಲಾಗುತ್ತಿದೆ . ಆರೋಗ್ಯ ಇಲಾಖೆಯಿಂದ ಸಂಬಂಧಪಟ್ಟ ಏಜೆನ್ಸಿಗಳಿಗೆ ಕಾರ್ಮಿಕರ ಪೂರ್ಣವಾಗಿ ವೇತನ ನೀಡಿದ್ದು , ಈ ಏಜೆನ್ಸಿಗಳು ಕಾರ್ಮಿಕರಿಗೆ ವಿತರಣೆ ಮಾಡಲಾಗುತ್ತಿದೆಯೇ ಎಂದು ಪರಿಶೀಲಿಸಿ ಮಾಹಿತಿಯನ್ನು ಆಯೋಗಕ್ಕೆ ನೀಡಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಯುಕೇಶ್ ಕುಮಾರ್ , ಉಪ ಕಾರ್ಯದರ್ಶಿಗಳಾದ ಸಂಜೀವಪ್ಪ , ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಮಾಜಿ ಸದಸ್ಯರಾದ ಗೋಕುಲ್ ನಾರಾಯಣಸ್ವಾಮಿ , ಆಯೋಗದ ಸಂಶೋಧನಾಧಿಕಾರಿಗಳಾದ ವೆಂಕಟೇಶ್ ಮೂರ್ತಿ , ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಶರಣಪ್ಪ , ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಚನ್ನಬಸಪ್ಪ , ಜಿಲ್ಲೆಯ ನಗರಸಭೆ ಮತ್ತು ಪುರಸಭೆಯ ಪೌರಾಯುಕ್ತರು ಮತ್ತು ಮುಖ್ಯಾಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.