ಶ್ರೀನಿವಾಸಪುರ (ವಿಶ್ವಕನ್ನಡಿಗ ನ್ಯೂಸ್): ಗ್ರಾಮಗಳಲ್ಲಿ ಗ್ರಾಮಸ್ಥರು ಪ್ಲಾಸ್ಟಿಕ್ನ್ನು ಹೆಚ್ಚಾಗಿ ಬಳಸುತ್ತಿರುವುದರಿಂದ ಜನರಿಗೆ ಹಾಗೂ ಜಾನುವಾರುಗಳ ಆರೋಗ್ಯದಲ್ಲಿ ಏರು – ಪೇರಾಗುತ್ತದೆ . ಆದ್ದರಿಂದ ಜಿಲ್ಲೆಯ ಪ್ರತಿ ಗ್ರಾಮವನ್ನು ಪ್ಲಾಸ್ಟಿಕ್ ಮುಕ್ತ ಗ್ರಾಮವನ್ನಾಗಿಸೋಣ ಎಂದು ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರು ತಿಳಿಸಿದರು.
ಇಂದು ಶ್ರೀನಿವಾಸಪುರ ತಾಲ್ಲೂಕಿನ ಯಲ್ಲೂರು ಹೋಬಳಿಯ ನೆರ್ನಹಳ್ಳಿ ಗ್ರಾಮದಲ್ಲಿ ಕಂದಾಯ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ “ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ” – ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು . ಗ್ರಾಮಕ್ಕೆ ಶೀಘ್ರದಲ್ಲಿ ರಸ್ತೆ ಸಂಪರ್ಕ ಒದಗಿಸಲಾಗುವುದು . ಸ್ಮಶಾನದಿಂದ ಗ್ರಾಮಕ್ಕೆ ಎರಡು ಕಿಲೋಮೀಟರ್ ಉತ್ತಮ ರಸ್ತೆಯನ್ನು ನಿರ್ಮಿಸಲು ಕ್ರಮಕೈಗೊಳ್ಳಲಾಗುವುದು .
ಗ್ರಾಮಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ಸೌಲಭ್ಯವನ್ನು ಒದಗಿಸಲಾಗುವುದು . ಟ್ರಾನ್ಸ್ಫಾರ ವ್ಯವಸ್ಥೆಯನ್ನು ದೇವಸ್ಥಾನಕ್ಕೆ ಮತ್ತು ಸ್ಮಶಾನಗಳಿಗೆ ಶೀಘ್ರದಲ್ಲಿ ಕಲ್ಪಿಸಲಾಗುವುದು . ಗ್ರಾಮಸ್ಥರ ಸಮಸ್ಯೆಗಳನ್ನು ಈ ಗ್ರಾಮ ವಾಸ್ತವ್ಯದಲ್ಲಿ ಸ್ಥಳದಲ್ಲೇ ಬಗೆಹರಿಸಲಾಗುವುದು ಎಂದು ತಿಳಿಸಿದರು .
ವಿದ್ಯಾರ್ಥಿವೇತನ ಬಗ್ಗೆ ಪರಿಶೀಲಿಸಿ ಗ್ರಾಮದಲ್ಲಿರುವ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಮಂಜೂರು ಮಾಡಲಾಗುವುದು . ಸಿ.ಎಸ್.ಆರ್ ಮೂಲಕ ಅತಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ಗಳನ್ನು ವಿತರಿಸಲಾಗುವುದು . ಜಲ ಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಗೆ ಕುಡಿಯುವ ನೀರಿನ ನಳಗಳನ್ನು ಸ್ಥಾಪಿಸಲಾಗುವುದು. ಸರ್ಕಾರದಿಂದ ವಸತಿ ಯೋಜನೆಯಡಿ ಮಂಜೂರಾದ ನಿವೇಶನಗಳಲ್ಲಿ ಮನೆ ನಿರ್ಮಿಸಿಕೊಳ್ಳಬೇಕು. ಗ್ರಾಮ ಪಂಚಾಯತಿ ಮೂಲಕ ಎಲ್ಲಾ ಹಳ್ಳಿಗಳಲ್ಲಿ ಕಸ ವಿಲೇವಾರಿ ಮಾಡಲಾಗುವುದು. ಎಲ್ಲಾ ಗ್ರಾಮಸ್ಥರು ಹಸಿ ಕಸ ಮತ್ತು ಒಣ ಕಸವನ್ನು ಪ್ರತ್ಯೇಕಿಸಿ ಪೌರಕಾರ್ಮಿಕರಿಗೆ ನೀಡಲು ವಿನಂತಿಸಿದರು . ಯಾವುದೇ ಕೆಲಸ ಪೂರ್ಣಗೊಳಿಸಲು ಗ್ರಾಮಸ್ಥರ ಸಹಕಾರ ಪ್ರಮುಖವಾಗಿರುತ್ತದೆ ಎಂದು ಅಭಿಪ್ರಾಯ ಪಡಿಸಿದರು .
ಶ್ರೀನಿವಾಸಪುರ ತಾಲ್ಲೂಕಿನ ತಹಶೀಲ್ದಾರ್ರಾದ ಶರೀನ್ ತಾಜ್ ಅವರು ಮಾತನಾಡಿ , ಕೋವಿಡ್ ಪೂರ್ವದಲ್ಲಿ ಗ್ರಾಮ ವಾಸ್ತವ್ಯ ನಡೆಸಲು ಸಾಧ್ಯವಾಗಲಿಲ್ಲ ಪ್ರಸ್ತುತ ಸರ್ಕಾರಿ ಅಧಿಕಾರಿಗಳು ಗ್ರಾಮಸ್ಥರ ಮನೆ ಬಾಗಿಲಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವ ಜನಪ್ರಿಯ ಕಾರ್ಯಕ್ರಮವನ್ನು ಮುಂದುವರಿಸಲಾಗುತ್ತಿದೆ ಸಾರ್ವಜನಿಕರು ಈ ಯೋಜನೆಯ ಪೂರ್ಣ ಲಾಭವನ್ನು ಪಡೆಯಲು ಮನವಿ ಮಾಡಿದರು . ಪಿಂಚಣಿ ಮತ್ತು ಮಾಸಾಶನಗಳ ಸಂಪೂರ್ಣ ಮಾಹಿತಿಯನ್ನು ಪಾರದರ್ಶಕವಾಗಿ ಸಾರ್ವಜನಿಕರಿಗೆ ಲಭ್ಯವಾಗುವಂತೆ ವ್ಯವಸ್ಥೆ ಮಾಡಲಾಗುವುದು . ಗ್ರಾಮಸ್ಥರ ಕುಂದುಕೊರತೆಗಳನ್ನು ಅರ್ಜಿಗಳ ಮೂಲಕ ನೀಡಿ ಬಗೆಹರಿಸಿಕೊಳ್ಳಬಹುದು. ಗ್ರಾಮಸ್ಥರು ಕಛೇರಿಗಳಿಗೆ ಭೇಟಿ ನೀಡಿ ಸರ್ಕಾರದ ಯೋಜನೆಗಳನ್ನು ತಿಳಿದು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಶ್ರೀನಿವಾಸಪುರ ತಾಲ್ಲೂಕಿನ ಕಾರ್ಯನಿರ್ವಹಣಾಧಿಕಾರಿಗಳಾದ ಎಸ್.ಆನಂದ್ ಅವರು ಮಾತನಾಡಿ ಈ ಗ್ರಾಮದ ರೈತರು ಕೃಷಿಯನ್ನು ಹೆಚ್ಚಾಗಿ ಆವಲಂಬಿಸಿದ್ದಾರೆ . ಸ್ಮಶಾನಗಳ ಅಭಿವೃದ್ಧಿಗಾಗಿ 296 ಸ್ಥಳಗಳನ್ನು ಸರ್ವೇ ಮಾಡಿ ಗುರುತಿಸಲಾಗಿದೆ . ಎಲ್ಲಾ ಗ್ರಾಮಗಳಲ್ಲಿ ಕಡ್ಡಾಯವಾಗಿ ಸ್ಮಶಾನಗಳನ್ನು ನಿರ್ಮಿಸಲಾಗುವುದು . ಚರಂಡಿ ಸಮಸ್ಯೆ ಬಗೆಹರಿಸಲಾಗುವುದು . ಬಳಸಿದ ನೀರನ್ನು ಸೋಕ್ ಪಿಟ್ಗಳನ್ನು ನಿರ್ಮಿಸಿ ಅದರಲ್ಲಿ ಶೇಖರಿಸಿ ನೀರಿನ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಒತ್ತು ನೀಡಬೇಕು . ಈ ಮೂಲಕ ನೀರಿನ ಅಭಾವವನ್ನು ತಡೆಗಟ್ಟಬಹುದು. ಸೋಕ್ ಪಿಟ್ ನಿರ್ಮಾಣಕ್ಕಾಗಿ ರೂ . 12 ಸಾವಿರದಿಂದ 14 ರವರೆಗೂ ಸರ್ಕಾರದಿಂದ ಸಹಾಯಧನ ನೀಡಲಾಗುವುದು. ಸೋಕ್ ಪಿಟ್ ವ್ಯವಸ್ಥೆಯಿಂದ ಸ್ವಚ್ಛತೆ ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಬಹುದು .
ಕುರಿ ಮತ್ತು ಕೋಳಿ ಶೆಡ್ ನಿರ್ಮಾಣಕ್ಕಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ರೂ . 45,000 / – ಹಾಗೂ ಸಾಮಾನ್ಯ ವರ್ಗದವರಿಗೆ ರೂ . 25,000 / – ಗಳ ಸಹಾಯಧನ ನೀಡಲಾಗುತ್ತಿದೆ . ಗ್ರಾಮಸ್ಥರು ಈ ಯೋಜನೆಯ ಪ್ರಯೋಜನವನ್ನು ಪಡೆಯಬೇಕು . ಗ್ರಾಮಗಳಲ್ಲಿರುವ ಶಾಲೆಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವುದು ಗ್ರಾಮಸ್ಥರ ಜವಾಬ್ದಾರಿಯಾಗಿರುತ್ತದೆ . ಟೊಮೊಟೋ ಹಾಗೂ ಮಾವು ಬೆಳೆಗಳನ್ನು ಹೆಚ್ಚಾಗಿ ಬೆಳೆಯದೆ ಇತರೆ ಎಲ್ಲಾ ವಿವಿಧ ಬೆಳೆಗಳನ್ನು ಬೆಳೆದು ಹೆಚ್ಚಿನ ಲಾಭವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು. ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಗಳಲ್ಲಿ ಏನೆಲ್ಲ ಸೌಲಭ್ಯಗಳು ಸಿಗುತ್ತದೆ ಎಂಬುದನ್ನು ಗ್ರಾಮಸ್ಥರಿಗೆ ವಿವರವಾಗಿ ತಿಳಿಸಿದರು . ಗ್ರಾಮ ವಾಸ್ತವ್ಯದಲ್ಲಿ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಮಗುವಿಗೆ ಅನ್ನಪ್ರಾಶನ ಮತ್ತು ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಮಾಡಲಾಯಿತು . ಕಾರ್ಯಕ್ರಮದಲ್ಲಿ ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಮಿನಿಕಿಟ್ ಬಿತ್ತನೆ ಬೀಜ ವಿತರಣೆ , ವೃದ್ಧಾಪ್ಯ ವೇತನ , ವಿಧವಾ ಪಿಂಚಣಿ ಹಾಗೂ ಆಯುಷ್ಮಾನ್ ಭಾರತ್ ಕಾರ್ಡ್ಗಳನ್ನು ಗ್ರಾಮದ ಫಲಾನುಭವಿಗಳಿಗೆ ಜಿಲ್ಲಾಧಿಕಾರಿಗಳ ಮುಖಾಂತರ ಸ್ಥಳದಲ್ಲೇ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ || ಜಗದೀಶ್ , ಜಿಲ್ಲಾ ಆಹಾರ ಮತ್ತು ನಾಗರೀಕರ ಸರಬರಾಜು ಇಲಾಖೆಯ ಉಪ ನಿರ್ದೇಶಕರಾದ ಸೋಮಶಂಕರಪ್ಪ , ಡಿ.ಡಿ.ಎಲ್.ಆರ್ ಡಿ.ಭಾಗ್ಯಮ್ಮ , ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ | ಚಾರಿಣಿ , ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಪ್ರೇಮ , ಸೋಮಯಾಜಲಹಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ವನಿತಾ , ಶ್ರೀನಿವಾಸಪುರ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ || ವಿಜಯ , ತೋಟಗಾರಿಕೆ ಇಲಾಖೆ ಅಧಿಕಾರಿಗಳಾದ ಎಸ್.ಶ್ರೀನಿವಾಸನ್ , ಅರಣ್ಯಾಧಿಕಾರಿಗಳಾದ ಬಾಲು , ಕೃಷಿ ಇಲಾಖೆ ಅಧಿಕಾರಿಗಳಾದ ರಘು , ರೇಷ್ಮೆ ಇಲಾಖೆ ಅಧಿಕಾರಿಗಳಾದ ಕೃಷ್ಣಪ್ಪ , ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಾದ ಶಿವಕುಮಾರ್ , ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಅಧಿಕಾರಿಗಳಾದ ಮುದ್ದಣ್ಣ , ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ವರದಿ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.