ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್): ಗ್ರಾಮೀಣ ಪ್ರದೇಶದಲ್ಲಿ ಮೂಲಭೂತ ಸೌಲಭ್ಯಗಳನ್ನು ಮೇಲ್ದಜೇಗೇರಿಸಲು ಗ್ರಾಮ ಪಂಚಾಯಿತಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಕೇವಲ ಸರ್ಕಾರಗಳ ಮೇಲೆ ಅವಲಂಬಿತರಾಗದೆ ಸ್ಥಳೀಯ ಮಟ್ಟದಲ್ಲಿ ಸಂಪನ್ಮೂಲಗಳನ್ನು ಕ್ರೂಡಿಕರಿಸಿ ಪಂಚಾಯಿತಿ ವ್ಯಾಪ್ತಿಯಲ್ಲಿ ಮುಂದಿನ ಐದು ಅಥವಾ 25 ವರ್ಷಗಳ ಭವಿಷ್ಯದ ದೃಷ್ಠಿಯಿಂದ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಿ ಪಂಚಾಯಿತಿಗಳನ್ನು ದೇಶದಲ್ಲಿ ಮಾದರಿಯಾಗಿ ಪರಿಚರ್ತಿಸಲು ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ಸುನೀಲ್ ಕುಮಾರ್ ಸೂಚಿಸಿದರು.
ತಾಲೂಕಿನ ಆನೂರು ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ವಿವಿಧ ಅಭಿವೃಧ್ಧಿ ಕಾಮಗಾರಿಗಳನ್ನು ಪರಿಶೀಲಿಸಿ ನಂತರ ಸುಧ್ಧಿಗಾರರೊಂದಿಗೆ ಮಾತನಾಡಿದ ಅವರು ಗ್ರಾಮೀಣ ಪ್ರದೇಶದ ಅಭಿವೃಧ್ಧಿಗಾಗಿ ಕೇಂದ್ರ ಸರ್ಕಾರ ವಿಶೇಷ ಒತ್ತು ನೀಡುತ್ತಿದೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ,ವಸತಿ ಯೋಜನೆ ಮತ್ತು ಜಲ ಮೂಲಗಳನ್ನು ಸಂರಕ್ಷಣೆ ಮಾಡುವ ಕಾಮಗಾರಿಗಳನ್ನು ನಡೆಸಿ ಗ್ರಾಮೀಣ ಪ್ರದೇಶದ ಸ್ವರೂಪ ಬದಲಾವಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿಗಳ ಮೇಲೆ ನಂಬಿಕೆ ಇಟ್ಟು ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಪಂಚಾಯಿತಿ ಆಡಳಿತ ಮಂಡಳಿಯ ಸದಸ್ಯರು ಭವಿಷ್ಯದ ಹಿತದೃಷ್ಠಿಯಿಂದ ಮಾಸ್ಟರ್ಪ್ಲಾನ್ ತಯಾರಿಸಬೇಕು ಗ್ರಾಮ ಸಭೆಗಳನ್ನು ಪರಿಣಾಮಕಾರಿಯಾಗಿ ಆಯೋಜಿಸಿ ಗ್ರಾಮಸ್ಥರ ಸಹಕಾರದಿಂದ ಜನರಿಗೆ ಪೂರಕವಾಗಿರುವ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ ಮುಂದಿನ ಪೀಳಿಗೆ ಶಾಶ್ವತವಾಗಿ ನೆನಪು ಮಾಡಿಕೊಳ್ಳುವಂತಹ ಕೆಲಸಗಳನ್ನು ಸ್ಥಳೀಯ ಸಂಸ್ಥೆಗಳು ಮಾಡಬೇಕು ವಿಶೇಷವಾಗಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಬಗ್ಗೆ ಹೆಚ್ಚು ಒತ್ತು ನೀಡಬೇಕೆಂದು ಸಲಹೆ ನೀಡಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಆನೂರು ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಅನೇಕ ಮಾದರಿ ಕೆಲಸಗಳು ನಡೆದಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿ ಆನೂರು ಗ್ರಾಮದಲ್ಲಿ ನಿರ್ಮಿಸಿರುವ ಡಿಜಿಟಲ್ ಗ್ರಂಥಾಲಯ, ಮಾದರಿ ಅಂಗನವಾಡಿ ಕೇಂದ್ರ, ಜಿಲ್ಲೆಯ ಮಾದರಿಯ ಹಿತ್ತಲಹಳ್ಳಿಯ ಶುಧ್ಧ ಕುಡಿಯುವ ನೀರು ಘಟಕ, ಗ್ರಾಮಸ್ಥರು ಮಾಡಿಕೊಂಡಿರುವ ನೆನಸುಗುಂಡಿ, ಬೆಳ್ಳೂಟಿಯ ಕಲ್ಯಾಣಿ ಹಾಗೂ ಸರ್ಕಾರಿ ಶಾಲಾ ಕಾಮಗಾರಿಗಳನ್ನು ನೋಡಿ ಗ್ರಾಮ ಪಂಚಾಯಿತಿಯ ಆಡಳಿತ ಮಂಡಳಿಯ ಸದಸ್ಯರು ಹಾಗೂ ಅಧಿಕಾರಿಗಳ ಕಾರ್ಯವೈಖರಿಯನ್ನು ಮೆಚ್ಚುಗೆ ವ್ಯಕ್ತಪಡಿಸಿ ಮುಂದಿನ ದಿನಗಳಲ್ಲಿ ಮತ್ತಷ್ಟು ಪ್ರಗತಿಯನ್ನು ಸಾಧಿಸಬೇಕೆಂದು ಸಲಹೆ ನೀಡಿದರು.
ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುವಂತೆ ಮಾಡಿ: ಕೇಂದ್ರ ಮತ್ತು ರಾಜ್ಯ ಸರ್ಕಾರಿಗಳು ಶಿಕ್ಷಣ ಕ್ಷೇತ್ರದ ಸುಧಾರಣೆಗಾಗಿ ಕೋಟ್ಯಾಂತರ ರೂಗಳನ್ನು ಖರ್ಚು ಮಾಡುತ್ತಿದೆ ವಿಶೇಷವಾಗಿ ಶಾಲೆಯಲ್ಲಿ ಕಲಿಕೆಗೆ ಪೂರಕವಾಗಿರುವ ವಾತಾವರಣವನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ ಸಾರ್ವಜನಿಕರ ಸಹಭಾಗಿತ್ವದಿಂದ ಸರ್ಕಾರಿ ಶಾಲೆಯಲ್ಲಿ ಡಿಜಿಟಲ್ ಕಲಿಕೆಯ ವ್ಯವಸ್ಥೆಗಳನ್ನು ಅಳವಡಿಸಲಾಗಿದೆ ಜೊತೆಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ನುರಿತ ಶಿಕ್ಷಕರನ್ನು ನೇಮಕ ಮಾಡಲಾಗಿದೆ ಗ್ರಾಮ ಪಂಚಾಯಿತಿ ಸದಸ್ಯರು ಪೋಷಕರ ಮನವೊಲಿಸಿ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವಂತಹ ಕೆಲಸವನ್ನು ಮಾಡಬೇಕು ಆಗ ಮಾತ್ರ ನಮ್ಮ ಶ್ರಮಕ್ಕೆ ಬೆಲೆ ಮತ್ತು ಫಲ ಸಿಗುತ್ತದೆ ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು ಶಿಕ್ಷಣ ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ಕಾಮಗಾರಿಗಳಿಗೆ ಪ್ರಥಮ ಆದ್ಯತೆ ನೀಡಬೇಕೆಂದು ತಾಕೀತು ಮಾಡಿದರು.
ರಾಜ್ಯ ಪಂಚಾಯತ್ ರಾಜ್ ಇಲಾಖೆಯ ಆಯುಕ್ತೆ ಶಿಲ್ಪಾಶರ್ಮಾ, ಜಿಲ್ಲಾ ಪಂಚಾಯಿತಿ ಸಿಇಓ ಪಿ.ಶಿವಶಂಕರ್, ಉಪ ಕಾರ್ಯದರ್ಶಿ ಬಿ.ಶಿವಕುಮಾರ್, ಇಓ ಮುನಿರಾಜು, ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೇತ್ರಾವತಿ, ಉಪಾಧ್ಯಕ್ಷ ಬಿ.ಎನ್.ವಿಶ್ವಾಸ, ಗ್ರಾಪಂ ಸದಸ್ಯ ಸಂತೋಷ ಬೆಳ್ಳೂಟಿ, ವಿಜೇಂದ್ರ, ವೆಂಕಟೇಶ್, ನರಸಿಂಹಮೂರ್ತಿ, ಜಪ್ತಿಹೊಸಹಳ್ಳಿ ಪ್ರಕಾಶ್, ಲತಾ ದೇವರಾಜ್, ಪಿಡಿಒ ಕಾತ್ಯಾಯಿನಿ,ಶಾಲಾಭಿವೃಧ್ಧಿ ಸಮಿತಿಯ ಅಧ್ಯಕ್ಷ ರಮೇಶ್ ಬೆಳ್ಳೂಟಿ,ಜಿಲ್ಲಾ ಪಂಚಾಯತ್ ಮಧು ಮತ್ತಿತರರು ಉಪಸ್ಥಿತರಿದ್ದರು.
ವರದಿ:ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.