ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಮಾಜಿ ಸಚಿವ ಎಂ.ಆರ್ ಸೀತಾರಾಮ್ ಕಾಂಗ್ರೆಸ್ ಹೈಕಮಾಂಡ್ ಮನವೊಲಿಕೆಗೂ ಬಗ್ಗದೇ, ಪುತ್ರ, ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಕ್ಷಾ ರಾಮಯ್ಯ ಜೊತೆ ಶೀಘ್ರವೇ ಕಾಂಗ್ರೆಸ್ ಗೆ ಗುಡ್ ಬೈ ಹೇಳುವ ಸಾಧ್ಯತೆ ದಟ್ಟವಾಗಿದೆ.
ರಕ್ಷಾ ರಾಮಯ್ಯ ಅವರನ್ನು ಇಂಡಿಯನ್ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಮಾಜಿ ಸಚಿವ ಎಂ.ಆರ್ ಸೀತಾರಾಮ್ ಅವರನ್ನು ಸಮಾಧಾನಪಡಿಸುವ ನಡೆಸಿದ ಪ್ರಯತ್ನಗಳು ವಿಫಲವಾಗಿವೆ.
ಸೀತಾರಾಂ ಅವರು 2023ರ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ತಮ್ಮ ಪುತ್ರ ರಕ್ಷಾ ರಾಮಯ್ಯ ಜೊತೆ ಕಾಂಗ್ರೆಸ್ ಗೆ ಗುಡ್ ಬೈ ಹೇಳುವ ಬಗ್ಗೆ ಆಲೋಚನೆ ನಡೆಸಿದ್ದಾರೆ. ವಿಧಾನಸಭೆಯಿಂದ ಪರಿಷತ್ ನಾಮ ನಿರ್ದೇಶನ ಮಾಡಲು ಅವರನ್ನು ಪರಿಗಣಿಸದಿರುವುದು ಅವರ ಅಸಮಾಧಾನಕ್ಕೆ ಕಾರಣವಾಗಿದೆ. 2023 ರ ವಿಧಾನಸಭಾ ಚುನಾವಣೆಯಲ್ಲಿ ಮಲ್ಲೇಶ್ವರಂನಿಂದ ಸ್ಪರ್ಧಿಸುವಂತೆ ಪಕ್ಷವು ಅವರನ್ನು ಮನವೊಲಿಸಲು ಪ್ರಯತ್ನಿಸಿದರೂ, ಅವರು ಆ ಪ್ರಸ್ತಾಪವನ್ನು ಸ್ವೀಕರಿಸಲು ಸಿದ್ಧರಿಲ್ಲ ಎಂದು ಹೇಳಲಾಗಿದೆ.
ಪಕ್ಷದ ಇತ್ತೀಚಿನ ಬೆಳವಣಿಗೆಗಳು ತಮಗೆ ಸರಿ ಕಾಣುತ್ತಿಲ್ಲ, ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆ ಜೊತೆ ಉತ್ತಮ ಸಂಬಂಧ ಹೊಂದಿದ್ದೇನೆ, ಜೂನ್ 24 ರಂದು ಅರಮನೆ ಮೈದಾನದಲ್ಲಿ ತಮ್ಮ ಬೆಂಬಲಿಗರ ಸಮಾವೇಶವನ್ನು ಆಯೋಜಿಸಿದ್ದೇನೆ, ಬೆಂಬಲಿಗರ ಪ್ರತಿಕ್ರಿಯೆಯನ್ನು ತಿಳಿದುಕೊಂಡು ಮುಂದಿನ ರಾಜಕೀಯ ನಡೆಯ ಬಗ್ಗೆ ತೀರ್ಮಾನಿಸುವುದಾಗಿ ಎಂ.ಆರ್ ಸೀತಾರಾಮ್ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.