(www.vknews.in) ಕೆಮ್ಮಾರ: ಇಲ್ಲಿನ ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮ ಅತ್ಯಂತ ಸಂಭ್ರಮ ಸಡಗರದಿಂದ ನೆರವೇರಿತು. ಬೆಳಿಗ್ಗೆ 9 ಗಂಟೆಗೆ ನಡೆದ ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅಝೀಝ್ ಬಿ.ಕೆ. ನೆರವೇರಿಸಿದರು. ನಂತರ ಶಾಲಾ ಮಕ್ಕಳಿಂದ ರಾಷ್ಟ್ರ ಗೀತೆ ಹಾಡಲಾಯಿತು.
ಬಳಿಕ ಪ್ರಾರ್ಥನಾ ಗೀತೆಯೊಂದಿಗೆ ಆರಂಭವಾದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅಝೀಝ್ ಬಿ.ಕೆ. ವಹಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮುಹಿಯುದ್ದೀನ್ ಜುಮ್ಮಾ ಮಸೀದಿ ಕೆಮ್ಮಾರ ಇದರ ಅಧ್ಯಕ್ಷ, ಕೊಡುಗೈ ದಾನಿ ರಶೀದ್ ಹಾಜಿ ಬಡ್ಡಮೆ ಮಾತನಾಡಿ, ಪ್ರಸ್ತುತ ಶಿಕ್ಷಣದಲ್ಲಿ ಕಲಿಕೆಯೊಂದಿಗೆ ಪರಿಸರದೊಂದಿಗೆ ಒಡನಾಟದ ಬಗ್ಗೆ ಅರಿವು ಮೂಡಿಸುವುದು ಆಧುನಿಕ ಕಾಲಘಟ್ಟದಲ್ಲಿ ಅನಿವಾರ್ಯ ಎಂದು ತಿಳಿಸಿದರು. ಅಲ್ಲದೇ ನಾವು ಕಲಿತ ಶಾಲೆಯ ಶ್ರೇಯೋಭಿವೃದ್ಧಿಗೆ ಶ್ರಮಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿ, ಶಾಲೆಗೆ ಅವಶ್ಯಕವಾದ ಧ್ವನಿವರ್ಧಕ ವ್ಯವಸ್ಥೆಯನ್ನು ಕೊಡುಗೆಯಾಗಿ ನೀಡುವುದಾಗಿ ಈ ಸಂದರ್ಭದಲ್ಲಿ ತಿಳಿಸಿದರು. ಕಾರ್ಯಕ್ರಮದ ಮತ್ತೋರ್ವ ಮುಖ್ಯ ಅತಿಥಿ ದುರ್ಗಾ ಪರಮೇಶ್ವರಿ ದೇವಸ್ಥಾನ ಕೆಮ್ಮಾರ ಇದರ ಅಧ್ಯಕ್ಷರಾದ ಸಂಜೀವ ನೇಕಾರ ಮಾತನಾಡಿ ನಮ್ಮ ಶಾಲೆ ನಡೆದು ಬಂದ ಹಾದಿಯ ಬಗ್ಗೆ ಸವಿಸ್ತಾರವಾಗಿ ತಿಳಿಸಿ, ನಮ್ಮೂರ ಶಾಲೆಯ ಅಳಿವು ಉಳಿವು ನಮ್ಮೆಲ್ಲರ ಕೈಯಲ್ಲಿ ಇದೆ. ಇದಕ್ಕೆ ಸರ್ವರೂ ಕೈಜೋಡಿಸಬೇಕೆಂದು ಮನವಿ ಮಾಡಿದರು. ನಮ್ಮ ಶಾಲೆಗೆ ಅವಶ್ಯಕವಾದ ಶಾಲೆಯ ಬಣ್ಣ ಬಳಿಯಲು 45 ಸಾವಿರ ರೂಪಾಯಿಗಳನ್ನು ನೀಡಿದ ರೋಟರಿ ಕ್ಲಬ್ ಉಪ್ಪಿನಂಗಡಿ ಇದರ ಅಧ್ಯಕ್ಷರಾದ ರೋ: ಜಗದೀಶ್ ನಾಯಕ್, ಹಾಗೂ ಪಂಚಾಯತ್ ಸದಸ್ಯರಾದ ವಾರಿಜಾಕ್ಷಿ, ಹೇಮಂತ್ ಮೈತಳಿಕೆ ಈ ಸಂದರ್ಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿ ಶಾಲೆಯ ಅಭಿವೃದ್ಧಿಗೆ ತಮ್ಮ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿ ಶುಭ ಹಾರೈಸಿದರು. ಸಮಾರಂಭದಲ್ಲಿ ನಮ್ಮ ಶಾಲೆಯ ಅಭಿವೃದ್ಧಿಗೆ ಉದಾರವಾಗಿ ದಾನ ನೀಡಿದ ಕೊಡುಗೈ ದಾನಿಗಳಿಗೆ ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ಬಹುಮಾನ ವಿತರಣಾ ಪಟ್ಟಿಯನ್ನು ಶಿಕ್ಷಕಿ ಶ್ರೀಮತಿ ಸುಮನಾ ಇವರು ವಾಚಿಸಿ ಅತಿಥಿಗಳ ಮೂಲಕ ವಿತರಿಸಲಾಯಿತು. ತಾಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ಶಿಕ್ಷಕಿ ಮೋಹನಾಂಗಿ ವೈಯಕ್ತಿಕವಾಗಿ ಬಹುಮಾನ ನೀಡಿ ಪುರಸ್ಕರಿಸಿದರು. ನಂತರ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಸಮಾರಂಭದಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೋಹನದಾಸ ಶೆಟ್ಟಿ ಬಡಿಲ, ಶಾಲಾಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷರುಗಳು, ಧ.ಗ್ರಾ. ಯೋಜನೆಯ ಒಕ್ಕೂಟದ ಅಧ್ಯಕ್ಷ ರವಿಕಾಂತ್ ಎಲ್.ಬಿ., ಹಿರಿಯರಾದ ಎನ್. ಸುಲೈಮಾನ್ ಹಾಗೂ ಅಂಗನವಾಡಿ ಶಿಕ್ಷಕಿ ಶ್ರೀಮತಿ ಸುಂದರಿ, ವಿದ್ಯಾರ್ಥಿಗಳ ಪೋಷಕರು, ಹಳೆ ವಿದ್ಯಾರ್ಥಿಗಳು, ಶಾಲಾ ಹಿತೈಷಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರು ಶ್ರೀಮತಿ ಜಯಶ್ರೀ ಎಂ. ಸ್ವಾಗತಿಸಿದರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಮೋಹನಾಂಗಿ ವಂದನಾರ್ಪಣೆಗೈದರು. ಶಿಕ್ಷಕರಾದ ಜುನೈದ್ ಕಾರ್ಯಕ್ರಮ ನಿರೂಪಿಸಿದರು. ಅಕ್ಷರ ದಾಸೋಹ ಸಿಬ್ಬಂದಿಗಳು ಸಹಕರಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.