ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಬಂಗ್ರ ಕೂಳೂರಿನಲ್ಲಿ ಸೆ.2ರಂದು ನಡೆಯುವ ಪ್ರಧಾನಿ ನರೇಂದ್ರ ಮೋದಿಯ ಕಾರ್ಯ ಕ್ರಮಕ್ಕೆ ಸ್ತ್ರೀಶಕ್ತಿ ಸ್ವಸಹಾಯ ಗುಂಪಿನ ಮಹಿಳೆಯರ ರಾಜಕೀಯ ದುರ್ಬಳಕೆಗೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ದ.ಕ.ಜಿಲ್ಲಾ ಸಮಿತಿ ಖಂಡಿಸಿದೆ.
ಪ್ರಧಾನಿ ಭಾಗವಹಿಸುವ ಕಾರ್ಯಕ್ರಮಕ್ಕೆ ಸ್ತ್ರೀಶಕ್ತಿ ಸ್ವಸಹಾಯ ಗುಂಪಿನ ಮಹಿಳೆಯರು ಕಡ್ಡಾಯವಾಗಿ ಭಾಗವಹಿಸಬೇಕು. ಮಹಿಳೆಯರನ್ನು ಕರೆತರಲು ಗ್ರಾಪಂ ವ್ಯಾಪ್ತಿಯಲ್ಲಿ ಬಸ್ ವ್ಯವಸ್ಥೆಯನ್ನು ಮಾಡಲಾಗುವುದೆಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿರುವುದು ಸ್ತ್ರೀಶಕ್ತಿ ಸ್ವಸಹಾಯ ಗುಂಪಿನ ಮಹಿಳೆಯರನ್ನು ಬಿಜೆಪಿ ಪಕ್ಷದ ಮತಬ್ಯಾಂಕ್ ರಾಜಕಾರಣಕ್ಕೆ ಬಳಸುವ ಹುನ್ನಾರವಾಗಿದೆ ಎಂದು ಸಂಘಟನೆ ಆರೋಪಿಸಿದೆ.
ಕೋವಿಡ್ ಸಂಕಷ್ಟ ಕಾಲದಲ್ಲಿ ಸಾಲದ ಕಂತು ಪಾವತಿಸಲಾಗದ ನೋವಿನಿಂದ ಸಾಲ ಮನ್ನಾ ಮಾಡಲು ಒತ್ತಾಯಿಸಿದರೂ ಕೂಡ ಲೆಕ್ಕಿಸದೆ ಕಾರ್ಪೊರೇಟ್ ವಲಯಕ್ಕೆ ಕೋಟ್ಯಂತರ ತೆರಿಗೆಯನ್ನು ಕೇಂದ್ರ ಸರಕಾರ ಮನ್ನಾ ಮಾಡಿತು. ಮಹಿಳೆಯರು ಈಗಲೂ ಎಂಎಫ್ಐಗಳ ಅಪಮಾನ, ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ. ಅವರ ಸಮಸ್ಯೆಗಳಿಗೆ ಸ್ಪಂದಿಸದ ಕೇಂದ್ರ ಮತ್ತು ರಾಜ್ಯ ಸರಕಾರ ಇಂದು ಅದೇ ಮಹಿಳೆಯರನ್ನು ರಾಜಕೀಯವಾಗಿ ದುರ್ಬಳಕೆ ಮಾಡಲು ಹೊರಟಿದೆ ಎಂದು ಆಪಾದಿಸಿದೆ.
ನರೇಂದ್ರ ಮೋದಿಯ ಕಾರ್ಯಕ್ರಮಕ್ಕೆ ಬಿಜೆಪಿಯ ಏಜೆಂಟರಂತೆ ಮಹಿಳೆಯರನ್ನು ಕರೆತರಲು ಜಿಲ್ಲಾಧಿಕಾರಿ ಹೊರಡಿಸಿದ ರಾಜಕೀಯ ಪ್ರೇರಿತ ಆದೇಶವನ್ನು ವಾಪಸ್ ಪಡೆಯಬೇಕು. ಜಿಲ್ಲಾಧಿಕಾರಿಯು ಈ ದೇಶದ ಸಂವಿಧಾನ ಮತ್ತು ಕಾನೂನಿಗೆ ಬದ್ಧರಾಗಿರಬೇಕೇ ವಿನಃ ಸರಕಾರಗಳಿಗಲ್ಲ ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಅಧ್ಯಕ್ಷೆ ಜಯಂತಿ ಶೆಟ್ಟಿ ಮತ್ತು ಪ್ರಧಾನ ಕಾರ್ಯದರ್ಶಿ ಭಾರತಿ ಬೋಳಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.