ಕೋಲಾರ (ವಿಶ್ವ ಕನ್ನಡಿಗ ನ್ಯೂಸ್): ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಶ್ನೆಪತ್ರಿಕೆ ಹಿಂದಿನ ವರ್ಷದಷ್ಟು ಸುಲಭವಾಗಿರುವುದಿಲ್ಲ , ನೀವು ಈಗಿನಿಂದಲೇ ಪರಿಶ್ರಮ ಹಾಕಿ ಓದಿದರೆ ಮಾತ್ರವೇ ಈ ಬಾರಿ ಉತ್ತಮ ಸಾಧನೆ ಮಾಡಲು ಸಾಧ್ಯ ಎಂಬುದನ್ನು ಅರಿತು ಕಲಿಕೆ ಮುಂದುವರೆಸಿ ಎಂದು ಜಿಲ್ಲಾ ಎಸ್ಸೆಸ್ಸೆಲ್ಸಿ ಪರೀಕ್ಷಾ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ ಮಕ್ಕಳಿಗೆ ಕಿವಿಮಾತು ಹೇಳಿದರು.
ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆಗೆ ದಿಢೀರ್ ಭೇಟಿ ನೀಡಿದ್ದ ಅವರು ಶಾಲೆಯಲ್ಲಿ ನಡೆಯುತ್ತಿದ್ದ ಎಸ್ಸೆಸ್ಸೆಲ್ಸಿ ಅರ್ಧವಾರ್ಷಿಕ ಪರೀಕ್ಷೆ ವೀಕ್ಷಿಸಿದ ನಂತರ ಮಕ್ಕಳೊಂದಿಗೆ ಮಾತನಾಡಿದರು. ಶಿಕ್ಷಕರ ಬೋಧನೆಯನ್ನು ಗಮನವಿಟ್ಟು ಕೇಳಿ , ಜತೆಗೆ ಪಠ್ಯಪುಸ್ತಕ ಓದುವ ಅಭ್ಯಾಸ ರೂಢಿಸಿಕೊಳ್ಳಿ , ಅನ್ವಯಿಕ ಪ್ರಶ್ನೆಗಳಿಗೆ ಉತ್ತರ ಬರೆಯಲು ಇದು ಹೆಚ್ಚು ಸಹಕಾರ ಎಂದರು.
ಉತ್ತಮ ಬರವಣಿಗೆ ನಿಮ್ಮ ಸಾಧನೆಗೆ ಸ್ಪೂರ್ತಿಯಾಗಲಿದೆ , ವಿದ್ಯಾರ್ಥಿಗಳು ಬರವಣಿಗೆ ಉತ್ತಮಪಡಿಸಿಕೊಳ್ಳಲು ನಿರಂತರವಾಗಿ ಪಠ್ಯದಲ್ಲಿರುವುದನ್ನೇ ಬರೆದು ಅಭ್ಯಾಸ ಮಾಡಿ , ಬರವಣಿಗೆ ಉತ್ತಮವಾಗಿದ್ದರೆ ಮಾತ್ರ ಶೇ .೧೦೦ ಅಂಕ ಪಡೆಯಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಎಸ್ಸೆಸ್ಸೆಲ್ಸಿ ಪ್ರಶ್ನೆ ಪತ್ರಿಕೆಯಲ್ಲಿ ಈ ಬಾರಿ ಕಠಿಣ ಪ್ರಶ್ನೆಗಳ ಪ್ರಮಾಣ ಹೆಚ್ಚಾಗಲಿದೆ ಕಳೆದಬಾರಿಯಷ್ಟು ಸುಲಭವಂತಗೂ ಅಲ್ಲ , ಶ್ರದ್ಧೆ ವಹಿಸಿ ಓದಿ , ನಿಮ್ಮ ದೈನಂದಿನ ಕಲಿಕೆಗಾಗಿ ನೀವೇ ವೇಳಾಪಟ್ಟ ಸಿದ್ಧಪಡಿಸಿಕೊಳ್ಳಿ , ಅದರಂತೆ ಓದುವುದನ್ನು ಅಭ್ಯಾಸ ಮಾಡಿಕೊಳ್ಳಿ ಎಂದರು.
ಫಲಿತಾಂಶ ಉತ್ತಮಪಡಿಸುವುದರ ಜತೆಗೆ ಇದೀಗ ಕೋವಿಡ್ನಿಂದಾದ ಕಲಿಕಾ ಹಿನ್ನಡೆಯನ್ನು ಸರಿಪಡಿಸುವ ಹೊಣೆಯೂ ಶಿಕ್ಷಕರ ಮೇಲಿದೆ , ಅದಕ್ಕಾಗಿ ಕಲಿಕಾ ಚೇತರಿಕೆ ಕಾರ್ಯಕ್ರಮ ಜಾರಿಗೆ ತರಲಾಗಿದೆ ಎಂದರು. ಶಿಕ್ಷಕರು ಕಲಿಕೆಯಲ್ಲಿ ಪ್ರಾಯೋಗಿಕ ಕಲಿಕೋಪಕರಣ ಬಳಸಲು ಸೂಚಿಸಿದ ಅವರು , ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಕಡೆ ಹೆಚ್ಚಿನ ಗಮನ ನೀಡಿ ಎಂದು ಸೂಚಿಸಿದರು.
ಅರಾಭಿಕೊತ್ತನೂರು ಪ್ರೌಢಶಾಲೆಯಲ್ಲಿ ಸ್ಮಾರ್ಟ್ಕ್ಲಾಸ್ , ಗ್ರಂಥಾಲಯ , ವಿಜ್ಞಾನ ಪ್ರಯೋಗಾಲಯ ಮತ್ತಿತರ ಅತ್ಯುತ್ತಮ ಸೌಲಭ್ಯಗಳನ್ನು ಒದಗಿಸಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪ್ರಭಾರ ಮುಖ್ಯ ಶಿಕ್ಷಕಿ ಸಿದ್ದೇಶ್ವರಿ , ಶಿಕ್ಷಕರಾದ ಎಂ.ಆರ್.ಗೋಪಾಲಕೃಷ್ಣ , ಭವಾನಿ , ಶ್ವೇತಾ , ಸುಗುಣಾ , ಲೀಲಾ , ವೆಂಕಟರೆಡ್ಡಿ , ಫರೀದಾ , ಶ್ರೀನಿವಾಸಲು , ಚಂದ್ರಶೇಖರ್ ಮತ್ತಿತರರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.