ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಐದನೇ ಮತ್ತು ಎಂಟನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಶಿಕ್ಷಣ ಕಾಯ್ದೆಯಡಿ ನಿರ್ಬಂಧವಿಲ್ಲ ಎಂದು, ಪರೀಕ್ಷೆ ರದ್ದುಗೊಳಿಸಿದ್ದ ಏಕಸದಸ್ಯ ಪೀಠದ ಆದೇಶವನ್ನು ರದ್ದುಗೊಳಿಸಿರುವ ವಿಭಾಗೀಯ ಪೀಠ ಪರೀಕ್ಷೆ ನಡೆಸಬಹುದೆಂದು ಆದೇಶ ನೀಡಿದೆ.
ಮಾ.27ರಿಂದ ಐದನೇ ಮತ್ತು ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದೆ. ಮಾ.27ರಿಂದ ಪರೀಕ್ಷೆ ನಡೆಸಲು ಸೂಚನೆ ನೀಡಿರುವ ಹೈಕೋರ್ಟ್, ಪಠ್ಯಕ್ರಮ ಬಿಟ್ಟು ಬೇರೆ ಪ್ರಶ್ನೆ ಕೇಳುವಂತಿಲ್ಲ, ಫಲಿತಾಂಶವನ್ನು ಸಾರ್ವಜನಿಕವಾಗಿ ಪ್ರಕಟಿಸುವಂತಿಲ್ಲ. ಶಾಲೆಗೆ ಮಾತ್ರವೇ ಕಳಿಸಬೇಕು ಎಂದು ಸೂಚಿಸಿದೆ.
ರಾಜ್ಯ ಸರಕಾರ ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೇ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲುದ್ದೇಶಿಸಿದ್ದ ನಿರ್ಧಾರದ ವಿರುದ್ಧ ಅನುದಾನ ರಹಿತ ಶಾಲೆಗಳ ಸಂಘ ಹೈಕೋರ್ಟ್ ಮೆಟ್ಟಿಲೇರಿತ್ತು. ಶಾಸಕಾಂಗದಲ್ಲಿ ಚರ್ಚೆ ಆಗದೇ ಅಧಿಕಾರಿಗಳೇ ನಿರ್ಧಾರ ಮಾಡಿದ್ದರು ಎಂದು ಅನುದಾನರಹಿತ ಶಾಲೆಗಳ ಸಂಘದ ಪರ ವಕೀಲರು ವಾದಿಸಿದ್ದರು. ಈ ವಾದವನ್ನು ಪುರಸ್ಕರಿಸಿದ, ನ್ಯಾ|ಪ್ರದೀಪ್ ಸಿಂಗ್ ಯೆರೂರ್ ಅವರಿದ್ಧ ಏಕಸದಸ್ಯ ಪೀಠ 5 ಮತ್ತು 8ನೇ ತರಗತಿ ಮಕ್ಕಳಿಗೆ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿ ತೀರ್ಪು ನೀಡಿತ್ತು.
ಪರೀಕ್ಷೆ ರದ್ದುಗೊಳಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರಕಾರ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಏಕಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿದ್ದ ವೀಭಾಗೀಯ ಪೀಠ ವಿಚಾರಣೆಯನ್ನು ಮಾ.14ಕ್ಕೆ ಮುಂದೂಡಿತ್ತು. ಮಾ.14ರಂದು ಯಾವುದೇ ಆದೇಶ ಮಾಡದೆ ವಿಚಾರಣೆ ಮಾ.15ಕ್ಕೆ ಮುಂದೂಡಿಕೆಯಾಗಿತ್ತು. ಇದೀಗ ವಿಚಾರಣೆ ಪೂರ್ಣಗೊಳಿಸಿರುವ ವಿಭಾಗೀಯ ಪೀಠ 5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆ ನಡೆಸಲು ಅನುಮತಿ ನೀಡಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.