ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ಪ್ರಧಾನಿ ನರೇಂದ್ರ ಮೋದಿ ಕುರಿತ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡಿದ್ದಕ್ಕಾಗಿ ದೆಹಲಿ ನ್ಯಾಯಾಲಯ ಮಂಗಳವಾರ ಬಿಬಿಸಿಗೆ ನೋಟಿಸ್ ಜಾರಿ ಮಾಡಿದೆ. ಬಿಜೆಪಿ ನಾಯಕ ಬಿನಯ್ ಕುಮಾರ್ ಸಿಂಗ್ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ದೆಹಲಿಯ ರೋಹಿಣಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ನ್ಯಾಯಾಲಯವು ಇಂಟರ್ನೆಟ್ ಆರ್ಕೈವ್ ಮತ್ತು ವಿಕಿಪೀಡಿಯಕ್ಕೆ ಸಮನ್ಸ್ ಜಾರಿ ಮಾಡಿದೆ. ೩೦ ದಿನಗಳಲ್ಲಿ ಲಿಖಿತ ಉತ್ತರವನ್ನು ಸಲ್ಲಿಸುವಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಸಂಘಪರಿವಾರದ ಸಂಘಟನೆಗಳಾದ ಆರ್ಎಸ್ಎಸ್ ಮತ್ತು ವಿಶ್ವ ಹಿಂದೂ ಪರಿಷತ್ಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಬಿಬಿಸಿ ಸಾಕ್ಷ್ಯಚಿತ್ರದ ಪ್ರಕಟಣೆಗೆ ತಡೆ ನೀಡುವಂತೆ ಕೋರಿ ಬಿಜೆಪಿ ನಾಯಕ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯವು ಈ ತಿಂಗಳ ೧೧ ರಂದು ಮತ್ತೆ ಪ್ರಕರಣದ ವಿಚಾರಣೆ ನಡೆಸಲಿದೆ.
ಸಂಘಪರಿವಾರದ ಸಂಘಟನೆಗಳ ವಿರುದ್ಧ ಸಾಕ್ಷ್ಯಚಿತ್ರದಲ್ಲಿ ನೀಡಿರುವ ಹೇಳಿಕೆಗಳು ದುರುದ್ದೇಶಪೂರಿತವಾಗಿವೆ ಮತ್ತು ಸಂಘಟನೆಗಳು ಮತ್ತು ಕಾರ್ಯಕರ್ತರನ್ನು ದೂಷಿಸುವ ಗುರಿಯನ್ನು ಹೊಂದಿವೆ ಎಂದು ಬಿನಯ್ ಕುಮಾರ್ ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದಾರೆ. ನಿಷೇಧಿತ ಬಿಬಿಸಿ ಸಾಕ್ಷ್ಯಚಿತ್ರವು ವಿಕಿಪೀಡಿಯ ಮತ್ತು ಯುಎಸ್ನ ಡಿಜಿಟಲ್ ಗ್ರಂಥಾಲಯದಲ್ಲಿ ಇನ್ನೂ ಲಭ್ಯವಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.