ಉಡುಪಿ, (ವಿಶ್ವ ಕನ್ನಡಿಗ ನ್ಯೂಸ್ ):ಮಕ್ಕಳ ಹಕ್ಕುಗಳ ರಕ್ಷಣೆ ಸೇರಿದಂತೆ ಅವುಗಳ ಅನುಷ್ಠಾನ ಮಾಡುವುದು ಪ್ರತಿಯೊಬ್ಬ ಇಲಾಖೆಯ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಮಕ್ಕಳ ರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡುತ್ತಿದ್ದರು.ಶಾಲಾ-ಕಾಲೇಜುಗಳು ಸೇರಿದಂತೆ ಹಾಸ್ಟೆಲ್ಗಳಲ್ಲಿ ಮಕ್ಕಳ ರಕ್ಷಣಾ ನೀತಿಯನ್ನು ತಪ್ಪದೇ ಜಾರಿಗೊಳಿಸುವುದರೊಂದಿಗೆ, ಮಕ್ಕಳಿಗೆ ಯಾವುದೇ ರೀತಿಯ ಸಮಸ್ಯೆಗಳು ಆಗದಂತೆ ನೋಡಿಕೊಳ್ಳಬೇಕು ಎಂದರು. ಶಾಲಾ-ಕಾಲೇಜು ವಸತಿ ಶಾಲೆಗಳಲ್ಲಿ ಮಕ್ಕಳ ರಕ್ಷಣಾ ಸಹಾಯವಾಣಿ 112 ಹಾಗೂ 1098 ಅನ್ನು ಗೋಡೆಯ ಮೇಲೆ ಕಡ್ಡಾಯವಾಗಿ ನಮೂದಿಸಬೇಕು ಎಂದರು.ಗ್ರಾಮ ಮಟ್ಟಗಳಲ್ಲಿ ಮಕ್ಕಳ ರಕ್ಷಣಾ ಸಮಿತಿ, ಮಹಿಳೆ ಮತ್ತು ಮಕ್ಕಳ ಕಾವಲು ಸಮಿತಿ ಹಾಗೂ ಮಕ್ಕಳ ಶಿಕ್ಷಣ ಸಮಿತಿಗಳನ್ನು ರಚಿಸಬೇಕು. ಪ್ರತೀ ಮೂರು ತಿಂಗಳಿಗೊಮ್ಮೆ ಸಭೆ ಸೇರಿ ಮಕ್ಕಳ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಅವುಗಳನ್ನು ಬಗೆಹರಿಸಬೇಕು ಎಂದರು.ಶಾಲೆಯಿಂದ ಯಾವುದೇ ಮಕ್ಕಳು ಹೊರ ಉಳಿಯದಂತೆ ನೋಡಿಕೊಳ್ಳಬೇಕು. ಈ ಬಗ್ಗೆ ಶಿಕ್ಷಣ ಇಲಾಖೆ, ಸ್ಥಳೀಯ ಸಂಸ್ಥೆಗಳು ಕಾರ್ಯಪ್ರವೃತ್ತರಾಗಿರಬೇಕು ಎಂದರು.ಶಾಲಾ ಆವರಣಗಳಲ್ಲಿ ವಿದ್ಯುತ್ ತಂತಿಯ ಮಾರ್ಗಗಳು ಇರುವ ಬಗ್ಗೆ ಜಿಲ್ಲಾ ಮಟ್ಟದಲ್ಲಿ ವರದಿಯನ್ನು ನೀಡಬೇಕು ಎಂದ ಅವರು, ಇವುಗಳ ತೆರವಿಗೂ ಸಹ ಮುಂದಾಗಬೇಕು ಎಂದರು.ಸಮಾಜದಲ್ಲಿನ ಅನಿಷ್ಠ ಪದ್ಧತಿಯಾದ ಬಾಲ್ಯ ವಿವಾಹಗಳು ಎಲ್ಲೂ ನಡೆಯದಂತೆ ನೋಡಿಕೊಳ್ಳಬೇಕು ಎಂದ ಅವರು, ಪ್ರೌಢಶಾಲಾ ಮಟ್ಟದಲ್ಲಿ ಮಕ್ಕಳು ಪ್ರೀತಿ-ಪ್ರೇಮಗಳು ನಡೆಯದಂತೆ ಕಡಿವಾಣ ಹಾಕಬೇಕು ಎಂದ ಅವರು, ಫೋಕ್ಸೋ ಕಾಯಿದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದರು.ಬಾಲ ಕಾರ್ಮಿಕ ಹಾಗೂ ಬಾಲ್ಯ ವಿವಾಹ ಪ್ರಕರಣಕ್ಕೆ ಒಳಗಾದವರಿಗೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಆದ್ಯತೆ ಮೇಲೆ ನೀಡಬೇಕು. ಪ್ರತೀ ಶಾಲೆಯಲ್ಲೂ ಮಕ್ಕಳ ಹಕ್ಕುಗಳ ಕ್ಲಬ್ಗಳನ್ನು ರಚಿಸುವುದರೊಂದಿಗೆ ವಿದ್ಯಾರ್ಥಿಗಳು ಅದರಲ್ಲಿ ಸಕ್ರೀಯವಾಗಿ ಭಾಗವಹಿಸಿಕೊಳ್ಳುವಂತೆ ನೋಡಿಕೊಳ್ಳುವ ಜವಾಬ್ದಾರಿ ಶಿಕ್ಷಣ ಇಲಾಖೆಯದ್ದಾಗಿದೆ ಎಂದ ಅವರು, ವಿದ್ಯಾರ್ಥಿಗಳಿಗೆ ಶಾಲಾ- ಶುಲ್ಕಗಳನ್ನು ಕಟ್ಟಿಲ್ಲ ಎಂಬ ಕಾರಣದಿಂದ ವರ್ಗಾವಣೆ ಪತ್ರವನ್ನು ತಡೆಹಿಡಿಯದಂತೆ ನೋಡಿಕೊಳ್ಳಬೇಕು ಎಂದರು.ಸಭೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಪೊಲೀಸ್ ಉಪ ಅಧೀಕ್ಷಕ ದಿನಕರ್, ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ ಉಪ ನಿರ್ದೇಶಕ ಕೃಷ್ಣಪ್ಪ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
-ಉಡುಪಿ ವಾರ್ತಾಭವನ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.