ಕೋಲಾರ (ವಿಶ್ವ ಕನ್ನಡಿಗ ನ್ಯೂಸ್): ಪರಿಶಿಷ್ಟ ಜಾತಿ ಪಂಗಡದವರಿಗೆ ದೌರ್ಜನ್ಯ, ಅತ್ಯಾಚಾರ ಹಾಗೂ ಅನಾವಶ್ಯಕ ಸಮಸ್ಯೆ ಉಂಟಾದಾಗ ಜಿಲ್ಲಾಡಳಿತ ಪ್ರಾಮಾಣಿಕವಾಗಿ ಅವರ ಸಮಸ್ಯೆಗಳನ್ನು ಬಗೆಹರಿಸಲು ಬದ್ಧರಾಗಿದ್ದೇವೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಅನುಸೂಚಿತ ಜಾತಿ- ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇಂದು ಮುಕ್ತ ಹಾಗೂ ಅರ್ಥಪೂರ್ಣ ಚರ್ಚೆ ನಡೆದಿದ್ದು, ಎಸ್.ಸಿ-ಎಸ್.ಟಿ ಸಮುದಾಯದ ಸಮಸ್ಯೆಗಳಿಗೆ ಹಾಗೂ ಅವರ ಒತ್ತಾಸೆಯಾಗಿ ಸಮಗ್ರವಾಗಿ ಪರಿಹಾರ ದೊರಕಿಸಲು ಜಿಲ್ಲಾ ಪಂಚಾಯತ್ ಹಾಗೂ ಪೊಲೀಸ್ ಇಲಾಖೆಯೊಂದಿಗೆ ಜಿಲ್ಲಾಡಳಿತ ಸದಾ ಸಿದ್ದರಿದ್ದೇವೆ ಎಂದರು. ಜಿಲ್ಲೆಯಾದ್ಯಂತ ಎಲ್ಲ ಹಳ್ಳಿಗಳಲ್ಲಿ ಎಸ್.ಸಿ-ಎಸ್.ಟಿ ಅವರಿಗೆ ಸ್ಮಶಾನ ಭೂಮಿ ಈ ಹಿಂದೆ ನೀಡಲಾಗಿದ್ದು, ಕೆಲವು ಸ್ಥಳ ಗಳಲ್ಲಿ ಇನ್ನೂ ಮಂಜೂರು ಮಾಡಬೇಕಿದೆ. ಆಯಾ ಸ್ಥಳಗಳಲ್ಲಿ ಸ್ಮಶಾನಕ್ಕಾಗಿ ಜಾಗ ಗುರುತಿಸಿ ಕೊಟ್ಟಲ್ಲಿ ಜಿಲ್ಲಾಡಳಿತ ಅತೀ ಶೀಘ್ರದಲ್ಲೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸ್ಮಶಾನಕ್ಕಾಗಿ ಭೂಮಿ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈ ಸಂದರ್ಭದಲ್ಲಿ ಸದಸ್ಯರೊಬ್ಬರು ಮಾತನಾಡಿ ಪ್ರತಿ ಗ್ರಾಮಗಳಲ್ಲಿ ಎಸ್.ಸಿ/ಎಸ್.ಟಿ ಅವರಿಗೆ ಸ್ಮಶಾನ ಆಂದೋಲನ ಹಮ್ಮಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು. ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ದೇವಾಲಯಗಳ ಪ್ರವೇಶಕ್ಕೆ ಮುಕ್ತ ಅವಕಾಶ ನೀಡಲು ಸದಸ್ಯರು ಮನವಿ ಮಾಡಿದರು. ಅಧ್ಯಕ್ಷರು ಮುಜರಾಯಿ ಇಲಾಖೆ ಹಾಗೂ ಉಪವಿಭಾಗಾಧಿಕಾರಿಗಳ ಮೂಲಕ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ದೇವಾಲಯಗಳಿಗೆ ಮುಕ್ತ ಪ್ರವೇಶ ದೊರಕುವಂತೆ ಕ್ರಮಕೈಗೊಳ್ಳಲು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪದ್ಮ ಬಸವಂತಪ್ಪ, ಕೆ.ಜಿ.ಎಫ್. ಪೊಲೀಸ್ ವರಿಷ್ಠಾಧಿಕಾರಿ ಶಾಂತಕುಮಾರ್, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಭಾಸ್ಕರ್, ಡಿವೈ ಎಸ್ ಪಿ ಮಲ್ಲೇಶ್, ಡಿ ಎಸ್ ಪಿ ನಂದಕುಮಾರ್, ಉಪ ವಿಭಾಗಾಧಿಕಾರಿ ವೆಂಕಟಲಕ್ಷಿಮ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸನ್, ದೌರ್ಜನ್ಯ ನಿಯಂತ್ರಣ ಜಾಗೃತಿ ಸಮಿತಿ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.