ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಿ ಮುಂದುವರಿಯಲಿದ್ದಾರೆ ; ಇದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ – ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
ಬಂಟ್ವಾಳ (www.vknews.in) : ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿಯಾಗಿ ಒಟ್ಟು 28 ಸ್ಥಾನದಲ್ಲಿದಲ್ಲಿ ಗೆಲುವು ಸಾಧಿಸುವುದು ನಿಶ್ವಿತ ಇದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಅವರು ಬಿ.ಸಿ.ರೋಡಿನ ಗಾಣದಪಡ್ಪು ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ದೇಶದ ಎಲ್ಲೆಡೆ ಮೋದಿ ಪರ ವಾತಾವರಣ ಇದೆ, ಪುಟ್ಟ ಮಕ್ಕಳಿಗೂ ಮೋದಿಯವರಲ್ಲಿ ಆತ್ಮವಿಶ್ವಾಸ ಇದೆ, ದಿನದ ಒಂದು ಗಳಿಗೆಯೂ ವಿಶ್ರಾಂತಿ ಪಡೆಯದೆ ನಿರಂತರವಾಗಿ ದೇಶದ ಬಗ್ಗೆ ಚಿಂತನೆ ಮಾಡುವ, ನುಡಿದಂತೆ ನಡೆದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಜಗತ್ತಿನಲ್ಲಿ ಶ್ರೇಷ್ಠ ವ್ಯಕ್ತಿಯಾಗಿದ್ದಾರೆ. ಈಗಾಗಿ ದ.ಕ.ಜಿಲ್ಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು 3 ಲಕ್ಷಗಿಂತಲೂ ಅಧಿಕ ಮತಗಳಿಂದ ಜಯಭೇರಿ ಬಾರಿಸುತ್ತಾರೆ, ಗೆಲ್ಲಿಸಿ ಕೊಡುತ್ತಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು. ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹುಬ್ಬಳ್ಳಿ ಘಟನೆಯ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳು ನೀಡಿದ ಹೇಳಿಕೆಯ ಬಗ್ಗೆ ಆಕ್ರೋಶ ವ್ಯಕ್ತವಾಗಿದ್ದು, ವೈಯಕ್ತಿಕ ಕಾರಣಾಕ್ಕಾಗಿ ಕೊಲೆ ನಡೆದಿದೆ ಎಂದಾದರೆ ರಾಜ್ಯದಲ್ಲಿ ಯಾರು ಯಾರನ್ನು ಕೊಲೆ ಮಾಡಬಹುದಾ ಎಂದು ಪ್ರಶ್ನಿಸಿದ ಅವರು ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರ ಅಲ್ಪಸಂಖ್ಯಾತರ ಬಗ್ಗೆ ಒಲವು ತೋರಿಸುವ, ತುಷ್ಟೀಕರಣದ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು.
ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಮಾತನಾಡಿ, ಸ್ವತಂತ್ರ ಭಾರತದಲ್ಲಿ ಈ ಬಾರಿಯ ಚುನಾವಣೆ ಅತ್ಯಂತ ವಿಶೇಷ ಚುನಾವಣೆಯಾಗಿದೆ. ನರೇಂದ್ರ ಮೋದಿಯವರು ಕಳೆದ 10 ವರ್ಷಗಳಲ್ಲಿ ಭಾರತವನ್ನು ಬೆಳೆಸಿಕೊಂಡ ರೀತಿ ಅದ್ಭುತವಾಗಿದೆ. ಮೋದಿಯವರ ಇಚ್ಚಾಶಕ್ತಿ, ನಾವು ನೀಡಿದ ಶಕ್ತಿಯನ್ನು ಬಳಸಿಕೊಂಡು ಅಯೋಧ್ಯೆಯಲ್ಲಿ ಭವ್ಯವಾದ ಶ್ರೀರಾಮನ ಮಂದಿರ ನಿರ್ಮಾಣವಾಗಿದೆ. ರಾಷ್ಟ್ರ ವಿರೋಧಿ ಮಾನಸಿಕತೆಯ ವಿರುದ್ದ ಹೋರಾಟ ನಿರಂತರವಾಗಲಿದ್ದು, ಎ.26 ರಂದು ಚುನಾವಣೆ ನಡೆಯುವವರೆಗೂ ಬಿಜೆಪಿಯ ವಿಚಾರವನ್ನು ಪ್ರತಿ ಮನ, ಮನೆಗೂ ತಿಳಿಸುವ ಕಾರ್ಯ ಮಾಡಿ. ಕರ್ನಾಟಕದಲ್ಲಿ 28 ಕ್ಕೆ 28 ಸ್ಥಾನಗಳನ್ನು ವಿಜಯೇಂದ್ರ ಅವರ ನೇತೃತ್ವದಲ್ಲಿ ಗಳಿಸೋಣ ಎಂದು ಕರೆ ನೀಡಿದರು.
ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಮಾತನಾಡಿ, ದೇಶದ ಭದ್ರತೆಗಾಗಿ, ಮುಂದಿನ ಪೀಳಿಗೆಗಾಗಿ ನಡೆಯುವ ಚುನಾವಣೆ ಇದಾಗಿದ್ದು, ಬಹಳಷ್ಟು ಪರಿವರ್ತನೆಗಳಿಗೆ ಕಾರಣವಾಗುವ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು. ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಮಾಜಿ ಶಾಸಕ ಎ.ರುಕ್ಮಯ ಪೂಜಾರಿ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ವೇದಿಕೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕರಾದ ವೈ. ಭರತ್ ಶೆಟ್ಟಿ, ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ , ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಜಿಲ್ಲಾ ಕಾರ್ಯದರ್ಶಿ ಕಿಶೋರ್ ಭಂಡಾರಿ ಪುತ್ತೂರು, ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಚುನಾವಣಾ ಪ್ರಭಾರಿಗಳಾದ ಜಗದೀಶ ಶೇಣವ, ಪೂಜಾ ಪೈ ಮಂಗಳೂರು, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಯುವ ಜೆ.ಡಿ.ಎಸ್ ಜಿಲ್ಲಾಧ್ಯಕ್ಷ ಅಕ್ಚಿತ್ ಸುವರ್ಣ, ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಮತ್ತಿತರರು ಉಪಸ್ಥಿತರಿದ್ದರು.
ಮಹಾನಗರ ಪಾಲಿಕೆ ಹಾಗೂ ಪುರಸಭಾ ಸದಸ್ಯ ಬಿಜೆಪಿಗೆ ಸೇರ್ಪಡೆ
ಮಂಗಳೂರು ಮಹಾನಗರ ಪಾಲಿಕೆ ಸದಸ್ಯೆ ಕವಿತಾಸನಿಲ್ ಹಾಗೂ ಬಂಟ್ವಾಳ ಪುರಸಭಾ ಸದಸ್ಯ ಗಂಗಾಧರ್ ಪೂಜಾರಿ ಅವರು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾದರು. ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಪಕ್ಷದ ಧ್ವಜವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.
ಬಿಜೆಪಿಗೆ ಸೇರ್ಪಡೆಯಾದ ಮಂಗಳೂರು ಮಹಾನಗರ ಪಾಲಿಕೆ ಸದಸ್ಯೆ ಕವಿತಾ ಸನಿಲ್ ಮಾತನಾಡಿ, ಮೋದಿಯವರ ತತ್ವ ಸಿದ್ದಾಂತಗಳು, ಬಿಜೆಪಿಯ ವಿಚಾರಗಳನ್ನು ಒಪ್ಪಿ ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ. ಯಾವುದೇ ಆಸೆ, ಆಕಾಂಕ್ಷೆಯಿಲ್ಲದೆ, ಸಾಮಾನ್ಯರಲ್ಲಿ ಸಾಮಾನ್ಯಳಾಗಿ ಪಕ್ಷವನ್ನು ಸಂಘಟಿಸುವಲ್ಲಿ ಶಕ್ತಿ ಮೀರಿ ಪ್ರಯತ್ನ ಮಾಡುತ್ತೇನೆ. ನಾನೊಬ್ಬಳು ಹಿಂದುವಾಗಿ ಭಾರತೀಯ ಧರ್ಮ ಉಳಿಯಬೇಕು ಎಂಬ ಯೋಚನೆಯಿಂದ ಪಕ್ಷವನ್ನು ಸೇರಿದ್ದೇನೆ ಎಂದು ತಿಳಿಸಿದರು.
ಬಿಜೆಪಿ ಬಂಟ್ವಾಳ ಮಂಡಲದ ಅಧ್ಯಕ್ಷ ಚೆನ್ನಪ್ಪ ಆರ್ ಕೋಟ್ಯಾನ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ ವಂದಿಸಿದರು. ಡೊಂಬಯ್ಯ ಅರಳ ಕಾರ್ಯಕ್ರಮ ನಿರೂಪಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.