ಕೋಲಾರ ( ವಿಶ್ವ ಕನ್ನಡಿಗ ನ್ಯೂಸ್ ) : – ಪತ್ರಿಕಾ ವೃತ್ತಿ ಅತ್ಯಂತ ಪವಿತ್ರವಾಗಿದ್ದು , ಜನತೆಗೆ ಸತ್ಯ ಸಂಗತಿ ತಿಳಿಸುವಾಗ ನಾವು ನಿಷ್ಟೂರತೆಯಿಂದ ಇರಬೇಕು , ಸಮಾಜಕ್ಕಾಗಿ ನಾವು ಎಂಬ ಭಾವನೆ ಇರಬೇಕು ಎಂದು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಿ.ಮುನಿರಾಜು ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಕೋವಿಡ್ ಹಿನ್ನೆಲೆ ಸರಳವಾಗಿ ಆಚರಿಸಲಾದ ಕನ್ನಡ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಎಂ.ಜಿ.ಪ್ರಭಾಕರ್ ಅವರನ್ನು ಸನ್ಮಾನಿಸಿ ಅವರು ಮಾತನಾಡುತ್ತಿದ್ದರು. ಪತ್ರಕರ್ತರ ಕಲ್ಯಾಣಕ್ಕಾಗಿ ಸರ್ಕಾರ ಮತ್ತಷ್ಟು ಕಾರ್ಯಕ್ರಮಗಳನ್ನು ಜಾರಿಗೆ ತರಬೇಕು , ಗ್ರಾಮೀಣ ಪತ್ರಕರ್ತರ ನೆರವಿಗೂ ಬರಬೇಕು , ಪತ್ರಕರ್ತರನ್ನು ಕೋವಿಡ್ ವಾರಿಯರ್ ಎಂದು ಪರಿಗಣಿಸಬೇಕು ಎಂದು ಮನವಿ ಮಾಡಿದರು.
ಕೋವಿಡ್ ಸಂದರ್ಭದಲ್ಲಿ ಸರಳವಾಗಿ ಪತ್ರಿಕಾ ದಿನಾಚರಣೆ ಆಚರಿಸಲಾಗುತ್ತಿದ್ದು , ಮುಂದಿನ ದಿನಗಳಲ್ಲಿ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗುವುದು ಎಂದು ಹೇಳಿದರು.
ಆತ್ಮಾವಲೋಕನ ಪತ್ರಕರ್ತರಿಗೆ ಅಗತ್ಯ ಪತ್ರಕರ್ತರು ಸಾಮಾಜಿಕ ಬದ್ದತೆ ಹೊಂದಿ ಪತ್ರಿಕೆಗಳ ವಿಶ್ವಾಸಾರ್ಹತೆಯನ್ನು ಮುಂದುವರೆಸಿಕೊಂಡು ಹೋಗುವ ನಿಟ್ಟಿನಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕೆಂದು ಹಿರಿಯ ಪತ್ರಕರ್ತ ಎಂ.ಜಿ.ಪಭಾಕರ ಹೇಳಿದರು . ಸಾಮಾಜಿಕ ಜಾಲ ತಾಣಗಳ ಅಬ್ಬರದಲ್ಲೂ ಪತ್ರಿಕೆಗಳು ಇನ್ನು ಜನರ ವಿಶ್ವಾಸಾರ್ಹತೆಯನ್ನು ಉಳಿಸಿಕೊಂಡಿವೆ ಎಂದು ಅಭಿಪ್ರಾಯಪಟ್ಟ ಅವರು , ಇದನ್ನು ಜತನದಿಂದ ಕಾಪಾಡಿಕೊಂಡು ಉಳಿಸಿಕೊಳ್ಳಬೇಕಾದ ಜವಾಬ್ದಾರಿ ಪ್ರತಿಯೊಬ್ಬ ಪತ್ರಕರ್ತ ಮೇಲಿದೆಯೆಂದರು .
ಕೋಲಾರ ಚಿಕ್ಕಬಳ್ಳಾಪುರ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತದ ಅಧ್ಯಕ್ಷ ಕೆ.ಎಸ್.ಗಣೇಶ್ ಮಾತನಾಡಿ , ಪತ್ರಕರ್ತರ ಜೀವನ ನಿರ್ವಹಣೆ , ಪತ್ರಿಕೆಗಳ ಮೇಲ್ವಿಚಾರಣೆ ಸವಾಲು ಎದುರಿಸುವುದರ ಜೊತೆಗೆ ಓದುಗರ ನಂಬಿಕೆ ವಿಶ್ವಾಸಗಳನ್ನು ಉಳಿಸಿಕೊಳ್ಳಬೇಕಾದ ಜವಾಬ್ದಾರಿ ಪತ್ರಕರ್ತರ ಮೇಲಿದೆ . ಸಾಮಾಜಿಕ ಜಾಲ ತಾಣದ ಸುದ್ದಿಗಳಿಗಿಂತಲೂ ನಂಬಿಕೆಗೆ ಅರ್ಹವಾದ ಸುದ್ದಿಗಳನ್ನು ಧ್ವನಿ ಇಲ್ಲದವರಿಗೆ ಧ್ವನಿಯಾಗುವ ಪರಂಪರೆಯನ್ನು ಪತ್ರಿಕೆಗಳು ಮುಂದುವರೆಸಿಕೊಂಡು ಹೋಗದಿದ್ದರೆ ಪತ್ರಿಕೋದ್ಯಮದ ಸರ್ವನಾಶ ಖಂಡಿತ ಎಂದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಕೆ.ಚಂದ್ರಶೇಖರ್ ಮಾತನಾಡಿ , ಕೋಲಾರ ಜಿಲ್ಲೆಯಲ್ಲಿ ಕೋವಿಡ್ನಿಂದ ಮೃತಪಟ್ಟಿರುವ ಪತ್ರಕರ್ತರಿಗೆ ಸರಕಾರದಿಂದ ಪರಿಹಾರ ಒದಗಿಸಲು ಹಾಗೂ ಸಂಘದ ಎಲ್ಲಾ ಸದಸ್ಯರಿಗೆ ವಿಮಾ ಸೌಲಭ್ಯವನ್ನು ಕಲ್ಪಿಸಲು ಪ್ರಯತ್ನ ನಡೆದಿದೆ ಎಂದರು.
ಪತ್ರಕರ್ತರ ಸಂಘದ ಖಜಾಂಚಿ ಎ.ಜಿ.ಸುರೇಶ್ಕುಮಾರ್ ಕಾರ್ಯಕ್ರಮವನ್ನು ನಿರೂಪಿಸಿದರು . ಕಾರ್ಯಕ್ರಮಕ್ಕೂ ಮುನ್ನ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ , ಕವಿ ಡಾ . ಸಿದ್ದಲಿಂಗಯ್ಯ , ಜಿಲ್ಲಾ ಪತ್ರಕರ್ತರಾದ ವೆಂಕಟೇಶ್ , ಎಂ.ಎ. ರವಿ , ಎನ್.ಎಸ್.ಮೂರ್ತಿ ನಿಧನಕ್ಕೆ ಮೌನ ಆಚರಿಸಲಾಯಿತು .
ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಪಾ.ಶ್ರೀ.ಅನಂತರಾಮ್ , ಪತ್ರಕರ್ತರ ಸಹಕಾರ ಸಂಘದ ಉಪಾಧಕ ಕೆ.ಮಂಜುನಾಥ್ ಸೇರಿದಂತೆ ಜಿಲ್ಲೆಂರು ಹಲವಾರು ಪತ್ರಕರ್ತರು ಭಾಗವಹಿಸಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.