ಶ್ರೀನಿವಾಸಪುರ (ವಿಶ್ವಕನ್ನಡಿಗ ನ್ಯೂಸ್) : ಪಟ್ಟಣದ ಕ್ರೀಡಾಂಗಣವನ್ನು ರೂ .೫ ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು , ಮಾದರಿ ಕ್ರೀಡಾಂಗಣವನ್ನಾಗಿ ರೂಪಿಸಲಾಗುವುದು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಅಧಿಕಾರಿಗಳು ಹಾಗೂ ಪಟ್ಟಣದ ನಾಗರಿಕರ ಸಭೆಯಲ್ಲಿ ಮಾತನಾಡಿ , ಕ್ರಿಡಾಂಗಣ ಅಭಿವೃದ್ಧಿಗೆ ಸರ್ಕಾರದಿಂದ ರೂ .೫ ಕೋಟಿ ಮಂಜೂರಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕ್ರೀಡಾಂಗಣದ ಸುತ್ತ ಒತ್ತುವರಿಯನ್ನು ತೆರವುಗೊಳಿಸಬೇಕು. ಸರ್ಕಾರಿ ಕಟ್ಟಡಗಳನ್ನು ಹೊರತುಪಡಿಸಿ , ಅನಧಿಕೃತ ನಿರ್ಮಾಣಗಳನ್ನು ತೆಗೆಯಬೇಕು.
ಈಜುಕೊಳ ಸೇರಿದಂತೆ , ಹೊರಾಂಗಣ ಹಾಗೂ ಒಳಾಂಗಣ ಕ್ರೀಡೆಗಳಿಗೆ ಅಗತ್ಯವಾದ ಅಂಕಗಣಗಳನ್ನು ನಿರ್ಮಿಸಬೇಕು ಎಂದು ಹೇಳಿದರು. ಮಾವಿನ ಪಟ್ಟಣ ಸ್ವಚ್ಚತೆ ಇಲ್ಲದ ಕೊಳೆತು ನಾರುತ್ತಿದೆ. ಪುರಸಭೆ ಮುಖ್ಯಾಧಿಕಾರಿ ತಮ್ಮ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಪಟ್ಟಣದಲ್ಲಿ ಬೀದಿ ದೀಪಗಳ ನಿರ್ವಹಣೆ ಮತ್ತಿತರ ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟ ಸರಿ ಇರಬೇಕು. ಕಮೀಷನ್ಸ್ ಆಸೆಗೆ ಸಾರ್ವಜನಿಕ ಹಣ ಪೋಲಾಗುವುದನ್ನು ಸಹಿಸಲಾಗದು ಎಂದು ಹೇಳಿದರು.
ಪಟ್ಟಣದ ಎಂಜಿ ರಸ್ತೆಯಲ್ಲಿ ವಾಹನ ದಟ್ಟಣೆ ಕಡಿಮೆ ಮಾಡಲು ಸಾರ್ವಜನಿಕರ ವಾಹನ ನಿಲುಗಡೆಯನ್ನು ನಿಗದಿತ ದಿನಗಳಂದು ಒಂದೊಂದು ಕಡೆ ನಿಗದಿಪಡಿಸಬೇಕು . ಪೊಲೀಸ್ ಹಾಗೂ ಪುರಸಭೆ ಸಿಬ್ಬಂದಿ ಅದು ಕಟ್ಟುನಿಟ್ಟಾಗಿ ಜಾರಿಯಾಗುವಂತೆ ನೋಡಿಕೊಳ್ಳಬೇಕು. ಪ್ರಯಾಣಿಕರ ಹಿತದೃಷ್ಟಿಯಿಂದ ಪಟ್ಟಣದ ಎರಡೂ ಬಸ್ ನಿಲ್ದಾಣಗಳಲ್ಲಿ ರಾಜ್ಯ ರಸ್ತೆ ಸಾರಿಗೆ ಬಸ್ ಸೇವೆ ಒದಗಿಸಬೇಕು . ಖಾಸಗಿ ಬಸ್ಗಳು ಹಳೆ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಅವಕಾಶ ನೀಡಬೇಕು.ಇದರಿಂದ ಹೊರಗಿನ ರಸ್ತೆಯಲ್ಲಿ ವಾಹನ ದಟ್ಟಣೆ ಕಡಿಮೆಯಾಗುತ್ತದೆ ಎಂದು ಹೇಳಿದರು.
ಪುರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಬೇಕು. ದೂರುಗಳು ಬರದಂತೆ ಎಚ್ಚರ ವಹಿಸಬೇಕು. ಒಳಚರಂಡಿ ನಿರ್ವಹಣೆ ಸಮರ್ಪಕವಾಗಿ ಇರುವಂತೆ ನೋಡಿಕೊಳ್ಳಬೇಕು. ಅಗತ್ಯ ಇರುವ ಕಡೆಗಳಲ್ಲಿ ಒಳಚರಂಡಿ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ , ಡಿವೈಎಸ್ಪಿ ಗಿರಿ , ಪೊಲೀಸ್ ಇನ್ಸ್ಪೆಕ್ಟರ್ ರವಿಕುಮಾರ್ , ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್ , ಉಪಾಧ್ಯಕ್ಷೆ ಆಯಿಷಾ ನಯಾಜ್ , ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ , ಆರೋಗ್ಯ ನಿರೀಕ್ಷಕ ಎಂ.ಪೃಥ್ವಿರಾಜ್ , ಸದಸ್ಯರಾದ ಬಿ.ವೆಂಕಟರಡ್ಡಿ , ಕೆ. ಅನ್ನಿಸ್ ಅಹ್ಮದ್ , ರಾಜು , ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಎಂ.ಕೆ.ಹುಸೇನ್ ಸಾಬ್ , ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್ , ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್ , ವರ್ತಕರ ಸಂಘದ ಅಧ್ಯಕ್ಷ ವೈ.ಆರ್.ಶಿವಪ್ರಕಾಶ್ , ಕಾರ್ಯದರ್ಶಿ ಕೆ.ವಿ.ಸೂರ್ಯನಾರಾಯಣ ಶೆಟ್ಟಿ ಇದ್ದರು.
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.