ಕೋಲಾರ (ವಿಶ್ವಕನ್ನಡಿಗ ನ್ಯೂಸ್) : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಕೋಲಾರ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಮಾರ್ಚ್ 12 , 2022 ರಂದು ರಾಷ್ಟ್ರೀಯ ಲೋಕ ಅದಾಲತ್ನ್ನು ಕೋಲಾರದ ಜಿಲ್ಲಾ ನ್ಯಾಯಾಲಯ , ಮಾಲೂರು , ಮುಳಬಾಗಿಲು , ಶ್ರೀನಿವಾಸಪುರ , ಕೆ.ಜಿ.ಎಫ್ . , ಬಂಗಾರಪೇಟೆ ತಾಲ್ಲೂಕು ನ್ಯಾಯಾಲಯಗಳಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಆರ್.ನಾಗರಾಜ್ ಅವರು ತಿಳಿಸಿದರು.
ಲೋಕ ಅದಾಲತ್ಗಳಲ್ಲಿ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳು ಅಂದರೆ ರಾಜೀ ಆಗಬಲ್ಲ ಅಪರಾಧಿಕ ಪ್ರಕರಣಗಳು , ಬ್ಯಾಂಕ್ ಪ್ರಕರಣಗಳು , ಹಣಕಾಸು ಪ್ರಕರಣಗಳು , ಮೋಟಾರು ವಾಹನ ಅಪಘಾತ ಸಂಬಂಧವಾಗಿ ಪರಿಹಾರ ಕೋರಿ ಪ್ರಕರಣಗಳು , ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು , ಕಾರ್ಮಿಕ ವಿವಾದಗಳು , ಕೈಗಾರಿಕಾ ಕಾರ್ಮಿಕರ ಸಂಬಂಧಿಸಿದ ಪ್ರಕರಣಗಳು , ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು , ಬ್ಯಾಂಕ್ ವಸೂಲಾತಿ ಪ್ರಕರಣಗಳು ಹಾಗೂ ಸಿವಿಲ್ ದಾವೆಗಳನ್ನು ಹಾಗೂ ವಿಶೇಷವಾಗಿ ಚೆಕ್ ಬೌನ್ಸ್ ಪ್ರಕರಣಗಳು , ರಾಜೀ ಸಂಧಾನದ ಪ್ರಕ್ರಿಯೆ ಮೂಲಕ ಬಗೆಹರಿಸಿಕೊಂಡು ಶೀಘ್ರ ಪರಿಹಾರ ಪಡೆಯಲು ಇದೊಂದು ಉತ್ತಮ ಅವಕಾಶವಾಗಿರುತ್ತದೆ ಎಂದು ತಿಳಿಸಿದರು.
ಪಕ್ಷಗಾರರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು ಮತ್ತು ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥ ಮಾಡಿಕೊಳ್ಳಲು ಇಚ್ಚಿಸಿದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಸಂಬಂಧಪಟ್ಟ ತಾಲ್ಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.
ಒಂದು ವೇಳೆ ಪಕ್ಷಗಾರರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಪ್ರಕರಣ ನಡೆಯುತ್ತಿರುವ ನ್ಯಾಯಾಲಯಕ್ಕೆ ಪ್ರಕರಣ ರಾಜೀ ಮಾಡಿಕೊಳ್ಳುವ ಕುರಿತು ತಿಳಿಸಬಹುದು ಅಥವಾ ಅರ್ಜಿ ಸಲ್ಲಿಸುವ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ತಿಳಿಸಿದರು.
ಪಕ್ಷಗಾರರು ಇಚ್ಚಿಸಿದಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಏರ್ಪಡಿಸಿರುವ ಪೂರ್ವ ಸಂಧಾನ ಬೈಠಕ್ಗಳಲ್ಲಿ ಭಾಗವಹಿಸುವ ನ್ಯಾಯಾಧೀಶರು , ಸಂಧಾನಕಾರರ ಸಮಕ್ಷಮ ತಮ್ಮ ಪ್ರಕರಣಗಳ ಪೂರ್ವ ಸಂಧಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದು ತಿಳಿಸಿದರು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಆಯಾ ತಾಲ್ಲೂಕು ಕಾನೂನು ಸೇವಾ ಸಮಿತಿಗಳನ್ನು ಹಾಗೂ ದೂರವಾಣಿ ಸಂಖ್ಯೆ 08152-228811 ಇ – ಮೇಲ್ ವಿಳಾಸ [email protected] ನಲ್ಲಿ ಸಂಪರ್ಕಿಸಬಹುದು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಗಂಗಾಧರ್ ಸಿ.ಹೆಚ್ , ವಕೀಲರ ಸಂಘದ ಅಧ್ಯಕ್ಷರಾದ ಜಿ.ಶ್ರೀಧರ್ ಅವರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.